ಶಾಸಕರ ದುಂಡಾವರ್ತನೆ: ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ಬಂದ್
ಬಳ್ಳಾರಿ, ನವೆಂಬರ್ 9: ಶಾಸಕ ಭೀಮಾನಾಯ್ಕ್ ಅವರ ದುಂಡಾವರ್ತನೆ ಖಂಡಿಸಿ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕನ್ನು ಬಂದ್ ಮಾಡಲು ಕರೆ ನೀಡಲಾಗಿದೆ.
ನವೆಂಬರ್ 11 ರಂದು ಬೆಳಗ್ಗೆ 9 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿ, ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಮಾಜಿ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಹೇಳಿದ್ದಾರೆ.
ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಅವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಬಂದ್ ನಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ರೌಡಿಸಂ ಮೂಲಕ ಮೆರೆಯುತ್ತಿರುವ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ದುರ್ವರ್ತನೆ ವಿರುದ್ಧ ಪ್ರತಿಭಟನೆಗೆ ಸಾರ್ವಜನಿಕರು ಸಹ ಸ್ಪಂದಿಸಬೇಕೆಂದು ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚಿಗೆ ಶಾಸಕ ಭೀಮಾನಾಯ್ಕ ಅವರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಕೆಲಕಾಲ ಪುರಸಭೆ ಚುನಾವಣೆಯ ಸಂದರ್ಭದಲ್ಲಿ ಮಾಜಿ ಶಾಸಕ ನೇಮಿರಾಜನಾಯ್ಕ ಮತ್ತು ಕಾರ್ಯಕರ್ತರು ಚುನಾವಣೆ ಪ್ರಕ್ರಿಯೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.
ಹಗರಿಬೊಮ್ಮನಹಳ್ಳಿಯ ಹಾಲಿ ಶಾಸಕ ಭೀಮಾನಾಯ್ಕ ಅವರು ತಮ್ಮ ಬೆಂಬಲಿಗರೊಂದಿಗೆ ಪುರಸಭೆ ಕಾರ್ಯಾಲಯದೊಳಗೆ ಕಾರಿನಲ್ಲಿ ಬಂದಿಳಿದಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಶಾಸಕ ಭೀಮಾನಾಯ್ಕ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕಿಳಿದಿದ್ದರು.












Click it and Unblock the Notifications