ಉಪ ಚುನಾವಣೆ : ಕಗ್ಗಂಟಾದ ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ!
ಬಳ್ಳಾರಿ, ಅಕ್ಟೋಬರ್ 12 : ಬಳ್ಳಾರಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವುದು ಕಗ್ಗಂಟಾಗಿದೆ. ಬಳ್ಳಾರಿ ಕಾಂಗ್ರೆಸ್ ಶಾಸಕರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬಳ್ಳಾರಿ ಕಾಂಗ್ರೆಸ್ ಶಾಸಕರ ಸಭೆ ನಡೆಯಿತು. ಆದರೆ, ಸಭೆಯಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿಲ್ಲ. ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆಯನ್ನು ನಡೆಸಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು, 'ಕಾಂಗ್ರೆಸ್ನಲ್ಲಿ ಲೋಕಸಭೆ ಉಪ ಚುನಾವಣೆ ಟಿಕೆಟ್ಗೆ ಹಲವು ಆಕಾಂಕ್ಷಿಗಳಿದ್ದಾರೆ. ನನ್ನ ಸಹೋದರ ವೆಂಕಟೇಶ ಪ್ರಸಾದ್ ಕೂಡಾ ಆಕಾಂಕ್ಷಿ' ಎಂದು ಹೇಳಿದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಜಯನಗರ ಶಾಸಕ ಆನಂದ್ ಸಿಂಗ್, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸಂಡೂರು ಶಾಸಕ ಇ.ತುಕಾರಾಂ, ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಶನಿವಾರ ಪಕ್ಷದ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆ ಇದೆ.

ಒಮ್ಮತ ಮೂಡಿಲ್ಲ
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಒಮ್ಮತ ಮೂಡಿಲ್ಲ. ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ ಪ್ರಸಾದ್ ಕಣಕ್ಕಿಳಿಸಲು ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಜೆ.ಶಾಂತ ಅಭ್ಯರ್ಥಿ. ಆದ್ದರಿಂದ, ಕಾಂಗ್ರೆಸ್ನಿಂದಲೂ ಮಹಿಳಾ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂಬುದು ಕೆಲವು ಶಾಸಕರ ವಾದವಾಗಿದೆ. ಆದ್ದರಿಂದ, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.

ಜಿ.ನಾಗಮಣಿ ಪರ ಲಾಬಿ
2018ರ ವಿಧಾನಸಭೆ ಚುನಾವಣೆಯಲ್ಲಿ ಕೂಡ್ಲಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ನಾಗಮಣಿ ಅವರ ಪರವಾಗಿ ಇ.ತುಕಾರಾಂ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಪರಮೇಶ್ವರ ನಾಯ್ಕ್ ಅವರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಕೆಲವು ಶಾಸಕರು ಒಪ್ಪಿಗೆ ನೀಡಿಲ್ಲ. ಆದ್ದರಿಂದ, ಸಿದ್ದರಾಮಯ್ಯ ಅವರು ಶಾಸಕರ ಜೊತೆ ಸಭೆ ನಡೆಸಿದರು.

ಎಲ್ಲರೂ ಒಗ್ಗಟ್ಟಾಗಿದ್ದೇವೆ
ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು, 'ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ಒಗ್ಗಟ್ಟಿನಿಂದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಎಲ್ಲಾ ಶಾಸಕರು ಒಟ್ಟಿಗೆ ಸಭೆಗೆ ಬರಬೇಕು ಎಂದೇನಿಲ್ಲ' ಎಂದು ಹೇಳಿದರು. ಇಂದು ನಡೆದ ಸಭೆಯಲ್ಲಿಯೂ ಅಭ್ಯರ್ಥಿ ಆಯ್ಕೆ ಮಾಡಲು ಸಾಧ್ಯವಾಗಿಲ್ಲ.

ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ
ಶಾಸಕರ ಜೊತೆ ಚರ್ಚಿಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಹೊಣೆಯನ್ನು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಆದರೆ, ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿಯಲ್ಲಿ ಪಾರುಪತ್ಯ ನಡೆಸುತ್ತಿದ್ದಾರೆ. ಅದು ತಪ್ಪಬೇಕು ಎಂದು ಆಗ್ರಹಿಸಿದ್ದ ಶಾಸಕರು ಈ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಜಗಳದ ಲಾಭ ಬಿಜೆಪಿಗೆ ಆಗಲಿದೆಯೇ? ಕಾದು ನೋಡಬೇಕು.

ಜೆ.ಶಾಂತ ಕಣಕ್ಕೆ
ಬಳ್ಳಾರಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ.
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದ, ಹಾಲಿ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಸಹೋದರಿ ಜೆ.ಶಾಂತ ಸ್ಪರ್ಧೆ ಮಾಡಲಿದ್ದಾರೆ.












Click it and Unblock the Notifications