ಬಿಜೆಪಿ ಸೇರಲಿರುವ 'ಕೈ' ಶಾಸಕ ನಾಗೇಂದ್ರ ಸಹೋದರ: ಬಳ್ಳಾರಿ ಅಭ್ಯರ್ಥಿ ಘೋಷಣೆ?
ಬಳ್ಳಾರಿ, ಮಾರ್ಚ್ 19: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಮಂಗಳವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿರುವ ಅವರು, ಕಾಂಗ್ರೆಸ್ನಿಂದ ಟಿಕೆಟ್ ಸಿಗುವುದಿಲ್ಲ ಎಂದು ಖಚಿತವಾದ ಕಾರಣ ಬಿಜೆಪಿ ಕೈಹಿಡಿಯಲು ಮುಂದಾಗಿದ್ದಾರೆ.
ಬಿಜೆಪಿಯಿಂದ ಸಿಡಿದು ಕಾಂಗ್ರೆಸ್ ಕೈಹಿಡಿದಿರುವ ಬಿ ನಾಗೇಂದ್ರ ಸಂದರ್ಶನ
ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಮೊಳಕಾಲ್ಮೂರು ಶಾಸಕ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಮತ್ತು ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಕಳೆದ ಚುನಾವಣೆಯಲ್ಲಿಯೂ ವೆಂಕಟೇಶ್ ಪ್ರಸಾದ್ ಬಳ್ಳಾರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ದೊರಕಿರಲಿಲ್ಲ. ವೆಂಕಟೇಶ್ ಪ್ರಸಾದ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ನೀಡಲು ಬಿ. ನಾಗೇಂದ್ರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿಕೊಳ್ಳಬೇಕು ಎಂಬ ಒತ್ತಡ ಹೇರಲಾಗಿತ್ತು ಎನ್ನಲಾಗಿದೆ.
ಅಕ್ರಮ ಗಣಿಗಾರಿಗೆ ಪ್ರಕರಣ: ಶಾಸಕ ನಾಗೇಂದ್ರ ಪೊಲೀಸರ ವಶಕ್ಕೆ
ಹೀಗಾಗಿ ಬಿ. ನಾಗೇಂದ್ರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳಲ್ಲಿ ನಾಗೇಂದ್ರ ಕಾಂಗ್ರೆಸ್ನಲ್ಲಿಯೇ ಉಳಿದುಕೊಂಡಿದ್ದಾರೆ. ಆದರೆ, ಅವರ ಸಹೋದರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.