Breaking; ಬಿಜೆಪಿ ತೊರೆದು ಕಾಂಗ್ರೆಸ್ಗೆ ಮರಳಿದ ಎಚ್. ಆರ್. ಗವಿಯಪ್ಪ
ಬಳ್ಳಾರಿ, ಸೆಪ್ಟೆಂಬರ್ 09: ವಿಜಯನಗರ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಶಾಸಕ ಎಚ್. ಆರ್. ಗವಿಯಪ್ಪ ಬಿಜೆಪಿ ತೊರೆದು ಕಾಂಗ್ರೆಸ್ಸೇರಿದರು. ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಗವಿಯಪ್ಪ 2018ರ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಚ್. ಆರ್. ಗವಿಯಪ್ಪ ಕಾಂಗ್ರೆಸ್ಗೆ ಮರಳಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಬಳ್ಳಾರಿಯ ಮಾಜಿ ಸಂಸದ ವಿ. ಎಸ್. ಉಗ್ರಪ್ಪ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳು ಈ ದೇಶದ ಕಟ್ಟುವಿಕೆಯಲ್ಲಿ ಮಹತ್ವದ ಪಾತ್ರ ವಹಿಸಿವೆ. ಇದರಿಂದ ಪ್ರೆರೇಪಿತರಾಗಿ ಹಲವಾರು ಜನರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.

ಹೊಸಪೇಟೆಯ ಮಾಜಿ ಶಾಸಕರಾದ ಗವಿಪ್ಪ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿದ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡೆ ಎಂದು ಡಿ. ಕೆ. ಶಿವಕುಮಾರ್ ಚಿತ್ರಗಳನ್ನು ಶೇರ್ ಮಾಡಿದ್ದಾರೆ.
ಎಚ್. ಆರ್. ಗವಿಯಪ್ಪ ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದರು. ಆದರೆ 2018ರ ಚುನಾವಣೆಯ ಸಮಯದಲ್ಲಿ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದಾಗ ಗವಿಯಪ್ಪಗೆ ಟಿಕೆಟ್ ಕೈ ತಪ್ಪಿತು. ಆಗ ಅವರು ಬಿಜೆಪಿ ಸೇರಿದರು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 74,986 ಮತಗಳನ್ನು ಪಡೆದು ಸೋಲು ಕಂಡರು.
ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ್ ಸಿಂಗ್ 83,214 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆದರೆ ಒಂದೇ ವರ್ಷದಲ್ಲಿ ವಿಜಯನಗರ ಪ್ರತ್ಯೇಕ ಜಿಲ್ಲೆಯಾಗಬೇಕು. ಜಿಂದಾಲ್ಗೆ ಭೂಮಿ ಪರಭಾರೆ ಮಾಡಬಾರದು ಎಂಬ ಬೇಡಿಕೆ ಮುಂದಿಟ್ಟುಕೊಂಡು ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದ್ ಸಿಂಗ್ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನದ ಬಳಿಕ ಬಿಜೆಪಿ ಸೇರಿದರು. 2020ರ ಡಿಸೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಮತ್ತೆ ಜಯಗಳಿಸಿದರು. ಆಗಲೂ ಎಚ್. ಆರ್. ಗವಿಯಪ್ಪಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು.
ಈಗ ಆನಂದ್ ಸಿಂಗ್ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರು. ಮುಂದಿನ ಚುನಾವಣೆಯಲ್ಲಿಯೂ ಅವರಿಗೆ ಮತ್ತೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಎಚ್. ಆರ್. ಗವಿಯಪ್ಪ ಕಾಂಗ್ರೆಸ್ಗೆ ಮರಳಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕರಿಗೆ ಟಿಕೆಟ್ ನೀಡಿದರೆ ಆನಂದ್ ಸಿಂಗ್ ಮತ್ತು ಗವಿಯಪ್ಪ ಮತ್ತೆ ಎದುರಾಳಿಗಳಾಗಲಿದ್ದಾರೆ.












Click it and Unblock the Notifications