ಬಳ್ಳಾರಿ ಜಿಲ್ಲಾ ವಿಭಜನೆಗೆ ನನ್ನ ಬೆಂಬಲವಿಲ್ಲ, ಹೋರಾಟಕ್ಕೂ ಸಿದ್ಧ: ಶಾಸಕ ಸೋಮಶೇಖರ ರೆಡ್ಡಿ
ಬಳ್ಳಾರಿ, ನವೆಂಬರ್ 18: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಖಡಾಖಂಡಿತವಾಗಿ ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಮುಖ್ಯಮಂತ್ರಿ ತಾತ್ವಿಕ ಒಪ್ಪಿಗೆ ವಿಚಾರದ ಕುರಿತ ಪ್ರಶ್ನಿಸಿದಾಗ, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಜಿಲ್ಲೆ ರಚನೆಗೆ ನನ್ನ ಸಹಮತವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಈ ಜಿಲ್ಲೆಯ ಜನರು ವಿಜಯನಗರ ಜಿಲ್ಲೆ ರಚನೆಯನ್ನು ವಿರೋಧಿಸಿ ಹೋರಾಟ ಮಾಡಿದರೆ ಅವರೊಂದಿಗೆ ನಾನೂ ಕೂಡ ನಿಲ್ಲುವೆ ಎಂದು ಎಚ್ಚರಿಸಿದ್ದಾರೆ.

ಬಳ್ಳಾರಿ ಜಿಲ್ಲೆ ವಿಭಜನೆಯಾದರೆ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೋಳಾಗುತ್ತದೆ. ಈ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ವಿಜಯನಗರ ಜಿಲ್ಲೆ ಬೇಡ ಬೇಡ ಎಂದು ಎಷ್ಟು ಬಾರಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಹೇಳಬೇಕು. ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಿ ಹೇಳಿದ್ದೇವೆ. ಇನ್ನೆಷ್ಟು ಬಾರಿ ಹೇಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಭಜನೆ ಆಗಲೇಬೇಕು ಎಂದು ನಿರ್ಧಾರವಾದರೆ ನಾವೇನು ಮಾಡಬೇಕು. ರಾಜ್ಯ ಸರ್ಕಾರ ಮೊಂಡುತನಕ್ಕೆ ಬಿದ್ದರೆ ನಾನೇನು ಮಾಡಬೇಕು. ನಾನಂತೂ ಇನ್ನೊಂದು ಬಾರಿ ಮುಖ್ಯಮಂತ್ರಿಗಳಿಗೆ ಹೇಳುವುದಿಲ್ಲ. ಯಾರಾದರೂ ಈ ಬಗ್ಗೆ ಹೋರಾಟ ಮಾಡಿದರೆ, ನಾನು ಬೆಂಬಲ ಕೊಡುತ್ತೇನೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಮ್ಮ ತೀರ್ಮಾನ ತಿಳಿಸಿದರು.
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಜನರು ಈ ಬಗ್ಗೆ ಪ್ರತಿಭಟನೆ ಮಾಡುತ್ತಾರೆ. ನನಗೆ ಪಕ್ಷ ಮುಖ್ಯ ಅಲ್ಲ, ನನಗೆ ಜನರೇ ಮುಖ್ಯ. ಜನರು ಹೋರಾಟ ಮಾಡಿದರೆ ನಾನೂ ಜನರ ಪರವಾಗಿ ಹೋರಾಟಕ್ಕೆ ಇಳಿಯುವೆ ಎಂದು ಖಡಾಖಂಡಿತವಾಗಿ ಬಳ್ಳಾರಿ ನಗರ ಬಿಜೆಪಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದರು.












Click it and Unblock the Notifications