ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶ, ಬಸ್ ಸಂಚಾರದಲ್ಲಿ ವ್ಯತ್ಯಯ
ಬಳ್ಳಾರಿ, ನವೆಂಬರ್ 18; ಕರ್ನಾಟಕ ಬಿಜೆಪಿ ಬಳ್ಳಾರಿಯಲ್ಲಿ ನವೆಂಬರ್ 20ರಂದು ಬೃಹತ್ ಸಮಾವೇಶ ನಡೆಯಲಿದೆ. ಸರ್ಕಾರಿ ಬಸ್ಗಳು ಸಮಾವೇಶಕ್ಕೆ ತೆರಳು ಕಾರಣ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
ಹೊಸಪೇಟೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ನವೆಂಬರ್ 20ರಂದು ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಹೊಸಪೇಟೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗದಿಂದ ಕರಾರು ಒಪ್ಪಂದದ ಮೇರೆಗೆ ಹೆಚ್ಚಿನ ವಾಹನಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ನವೆಂಬರ್ 19 ರಿಂದ ನವೆಂಬರ್ 21ರವರೆಗೆ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಹರಪನಹಳ್ಳಿ ತಾಲೂಕುಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಜೆಪಿಯಿಂದ ಸಮಾವೇಶ; ಕರ್ನಾಟಕ ಬಿಜೆಪಿ ನವೆಂಬರ್ 20ರ ಭಾನುವಾರ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶ ಆಯೋಜನೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ಬಿಜೆಪಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು, ಫಲಾನುಭವಿಗಳು ಹಾಗೂ ಸಾರ್ವಜನಿಕರು ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದೆ.
ಕರ್ನಾಟಕ ಸರ್ಕಾರ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಏರಿಕೆ ಮಾಡಿದೆ. ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನಂತೆ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಏರಿಕೆ ಮಾಡಲಾಗಿದೆ.

ಲಕ್ಷಾಂತರ ಜನರು ಸೇರುವ ನಿರೀಕ್ಷೆ; ಬಳ್ಳಾರಿ ಜಿಲ್ಲೆ ಸಾರಿಗೆ ಸಚಿವ ಬಿ. ಶ್ರೀರಾಮುಲು ತವರು ಕ್ಷೇತ್ರ. ಆದ್ದರಿಂದ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಕರ್ನಾಟಕ ಬಿಜೆಪಿ ಸಕಲ ತಯಾರಿ ನಡೆಸುತ್ತಿದೆ.
ರಾಜ್ಯ ಮಟ್ಟದ ಎಸ್ಟಿ ಸಮಾವೇಶಕ್ಕೆ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು ಕಾರ್ಯಕ್ರಮ ನಡೆಯುವ ಸ್ಥಳವನ್ನು ಬಿ. ಶ್ರೀರಾಮುಲು ಖುದ್ದು ಪರಿಶೀಲನೆ ನಡೆಸಿ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಿಸಿದವರಿಗೆ ಸೂಚನೆ ನೀಡಿದ್ದಾರೆ.
ಈ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಸಮುದಾಯದ ಎಲ್ಲರೂ ಪಕ್ಷ ಬೇದ ಮರೆತು ಕೈ ಜೋಡಿಸಿದ್ದಾರೆ. ಭಾನುವಾರದ ಸಮಾವೇಶವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದು, ಸಮುದಾಯದ ಲಕ್ಷಾಂತರ ಜನರು ಸಮಾವೇಶವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದಾರೆ ಎಂದು ಬಿ. ಶ್ರೀರಾಮುಲು ಹೇಳಿದ್ದಾರೆ.
ಬಿಜೆಪಿಯ ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳು ಸೇರಿ ಸುಮಾರು 6 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಈ ಸಮಾವೇಶಕ್ಕೆ ಜನರನ್ನು ಕರೆತರಲು 6,200 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿಯಲ್ಲಿ 28 ಕಡೆಗಳಲ್ಲಿ ವಾಹನದ ಪಾರ್ಕಿಂಗ್ ವ್ಯವಸ್ಥೆ ಇದೆ.
ಸಾಲು-ಸಾಲು ಸಮಾವೇಶಗಳು; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಉಳಿದಿವೆ. ಈ ಹಿನ್ನಲೆಯಲ್ಲಿ ಬಿಜೆಪಿ ಈಗಿನಿಂದಲೇ ಪ್ರಚಾರ ಕಾರ್ಯಕ್ಕೆ ಚುರುಕು ನೀಡಿದೆ. ರಾಷ್ಟ್ರೀಯ ನಾಯಕರನ್ನು ಕರೆಸಿ ವಿವಿಧ ಜಿಲ್ಲೆಗಳಲ್ಲಿ ಸಮಾವೇಶಗಳನ್ನು ನಡೆಸಲು ಚಿಂತನೆ ನಡೆಸಿದೆ.
ಬಿಜೆಪಿ ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಮೇಲೆ ಹೆಚ್ಚು ಗಮನಹರಿಸುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ, ಮೈಸೂರು, ಹಾಸನ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮುಂತಾದ ಕಡೆ ಹೆಚ್ಚು ಸಮಾವೇಶ ಆಯೋಜನೆ ಮಾಡಲು ಮುಂದಾಗಿದೆ.












Click it and Unblock the Notifications