ಉಪ ಚುನಾವಣೆ: ಶಿಗ್ಗಾವಿ, ಸಂಡೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಮಹತ್ವದ ಸಭೆ
ಬಳ್ಳಾರಿ, ಅಕ್ಟೋಬರ್ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 18ರಂದು ಉಪ ಚುನಾವಣೆ ಅಧಿಸೂಚನೆಯೂ ಪ್ರಕಟವಾಗಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಚುನಾವಣೆ ಎದುರಿಸುವ ತಯಾರಿಯಲ್ಲಿವೆ. ಆದರೆ ಯಾವುದೇ ಪಕ್ಷಗಳು ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಅಕ್ಟೋಬರ್ 25ರ ಶುಕ್ರವಾರ ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯಾರು? ಎಂಬ ಚರ್ಚೆ ನಡೆಯುತ್ತಿದೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಅವರು ಇತರ ಎರಡು ಕ್ಷೇತ್ರಗಳ ಪ್ರವಾಸ ಕೈಗೊಂಡಿದ್ದಾರೆ.

ನವೆಂಬರ್ 13ರಂದು ಬಳ್ಳಾರಿ ಜಿಲ್ಲೆಯ ಸಂಡೂರು, ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಉಪ ಚುನಾವಣೆಯನ್ನು ಎದುರಿಸಲಿವೆ. ಆದ್ದರಿಂದ ಕಾರ್ಯಕರ್ತರ ಜೊತೆ ಸಭೆ ನಡೆಸಲು ನಿಖಿಲ್ ಕುಮಾರಸ್ವಾಮಿ ಪ್ರವಾಸ ಹೊರಟಿದ್ದಾರೆ.
ಎರಡೂ ಕ್ಷೇತ್ರದಲ್ಲಿ ಸಭೆ: ಅಕ್ಟೋಬರ್ 19ರ ಶನಿವಾರ ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಚರ್ಚಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ. ಬಿ. ಸುರೇಶ್ ಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ ಹಾಗೂ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಭೆಯನ್ನು ನಡೆಸಲಿದ್ದಾರೆ. ಅಭ್ಯರ್ಥಿ ಆಯ್ಕೆ, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಕುರಿತು ಸ್ಥಳೀಯ ಮುಖಂಡರಿಗೆ, ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲಾಗುತ್ತದೆ.
ಪಕ್ಷದ ನಾಯಕರ ತಂಡ ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 11ಕ್ಕೆ ಸಂಗನಬಸವ ವಿರಕ್ತ ಮಠ, ಸಭಾಭವನ, ಶಿಗ್ಗಾವಿ ನಗರ, ಹಾವೇರಿ ಜಿಲ್ಲೆ ಇಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 3ಕ್ಕೆ ಅನಿಲ್ ಲಾಡ್ ರೆಸಾರ್ಟ್, ಬಳ್ಳಾರಿ ರಸ್ತೆ, ಸಂಡೂರು ಇಲ್ಲಿ ಸಭೆ ನಡೆಯಲಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿರಲಿಲ್ಲ. ಚುನಾವಣೆಯಲ್ಲಿ ಸಂಡೂರಿನಲ್ಲಿ ಎನ್. ಸೋಮಪ್ಪ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದರು. 2617 ಮತಗಳನ್ನು ಪಡೆದು ಅವರು ಚುನಾವಣೆಯಲ್ಲಿ ಸೋಲು ಕಂಡಿದ್ದರು. ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೊಂದಿಲ್ಲ. ಮೈತ್ರಿ ಧರ್ಮದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸಹ ಇನ್ನೂ ಘೋಷಣೆಯಾಗಿಲ್ಲ.
ಇನ್ನು ಶಿಗ್ಗಾವಿ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಶಶಿಧರ್ ಯಲಿಗಾರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಅವರು ಚುನಾವಣೆಯಲ್ಲಿ 13,928 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಕ್ಷೇತ್ರದಲ್ಲಿಯೂ ಸಹ ಜೆಡಿಎಸ್ ಪ್ರಭಾವ ಹೊಂದಿಲ್ಲ. ಆದ್ದರಿಂದ ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡುವುದು ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನು ಘೋಷಣೆಯಾಗಬೇಕಿದೆ.
ಮೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ಟೋಬರ್ 18ರ ಶುಕ್ರವಾರ ಉಪ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಕ್ಟೋಬರ್ 28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರ ಬುಧವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ನವೆಂಬರ್ 13ರ ಬುಧವಾರ ಮತದಾನ ನಡೆಯಲಿದ್ದು, ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದೆ. ಆದ್ದರಿಂದ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆ ನಡೆಸಿ, ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಸೂಚನೆಗಳನ್ನು ನೀಡಲಿದ್ದಾರೆ.
ಮೂರು ಕ್ಷೇತ್ರಗಳ ಉಪ ಚುನಾವಣೆಯ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಪ್ರಭಾವವಿದೆ. 2023ರಲ್ಲಿ ಕ್ಷೇತ್ರದಲ್ಲಿ ಎಚ್. ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಆದರೆ ಈ ಉಪ ಚುನಾವಣೆಯಲ್ಲಿ ಕ್ಷೇತ್ರ ಜೆಡಿಎಸ್ ಪಕ್ಷಕ್ಕೋ? ಅಥವ ಬಿಜೆಪಿಗೂ ಎಂಬ ಚರ್ಚೆ ನಡೆದಿದೆ.












Click it and Unblock the Notifications