"ಫಲಿತಾಂಶದ ನಂತರ ರಾಜ್ಯದಲ್ಲಿ ಸ್ಫೋಟ! ಮುಖ್ಯಮಂತ್ರಿಗಳೇ ರಾಜೀನಾಮೆ ನೀಡ್ತಾರೆ"
Recommended Video
ಬಳ್ಳಾರಿ, ಏಪ್ರಿಲ್ 23: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ರಾಜ್ಯದಲ್ಲಿ ಸ್ಫೋಟಕ ಬೆಳವಣಿಗೆ ನಡೆಯಲಿದೆ, ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಶ್ರೀರಾಮುಲು, 'ರಮೇಶ್ ಜಾರಕಿಹೊಳಿ ಅವರು ಬಿಜೆಪಿಗೆ ಬಂದರೆ ಸ್ವಾಗತ. ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲೂ ಭಾರೀ ಬೆಳವಣಿಗೆಯಾಗಲಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ರಾಜೀನಾಮೆ ನೀಡುತ್ತಾರೆ' ಎಂದು ಅವರು ಹೇಳಿದರು.
'ಫಲಿತಾಂಶ ಬರುವ ಮುನ್ನವೇ ಮೈತ್ರಿ ಸರ್ಕಾರ ಪತನಗೊಂಡರೆ ಆಶ್ಚರ್ಯವಿಲ್ಲ'
ಇದೇ ಸಂದರ್ಭ ಲೋಕಸಭೆ ಚುನಾವಣೆಗೆ ಮತಚಲಾಯಿಸಿದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು, 'ರಮೇಶ್ ಜಾರಕಿಹೊಳಿ ಅವರು ಬಿಜೆಪಿಗೆ ಬರುವುದಾದರೆ ಸ್ವಾಗತ. ಅವರನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸಲಾಗುತ್ತಿದೆ' ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಇಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತಚಲಾಯಿಸಿದ ನಂತರ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ತಾವು ರಾಜೀನಾಮೆ ನಂತರ ಮುಂದಿನ ನಿರ್ಧಾರ ಕೈಗೊಳ್ಳುವಾಗಿ ಹೇಳಿದ್ದರು. ಈ ಬೆಳವಣಿಗೆಯ ನಂತರ ಕೂಡಲೇ ಎಚ್ಚೆತ್ತುಕೊಂಡ ಬಿಜೆಪಿ, ರಮೇಶ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಮೇ 23 ರಂದು ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ ನಾಯಕರ ಭವಿಷ್ಯ ಎಷ್ಟರ ಮಟ್ಟಿಗೆ ಸತ್ಯವಾಗಲಿದೆ ಎಂಬುದು ತಿಳಿಯಲಿದೆ.