ಬಳ್ಳಾರಿಯಲ್ಲಿ ಕಾಂಗ್ರೆಸ್ ಸಮಾವೇಶ, ಬಸ್ ಇಲ್ಲದೇ ಜನರ ಪರದಾಟ
ಬಳ್ಳಾರಿ, ಅಕ್ಟೋಬರ್ 14; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಬಳ್ಳಾರಿಗೆ ಶುಕ್ರವಾರ ಸಂಜೆ ಆಗಮಿಸಲಿದೆ. ಶನಿವಾರ ಬಳ್ಳಾರಿ ನಗರದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ.
ಶನಿವಾರ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಪಕ್ಷದ ಕಾರ್ಯಕರ್ತರು ಆಗಮಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕರಾರು ಒಪ್ಪಂದದ ಮೇರೆಗೆ ಬಸ್ಗಳನ್ನು ನೀಡಲಾಗಿದೆ.
ಇದರಿಂದಾಗಿ ಶುಕ್ರವಾವೇ ಸಂಡೂರು ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚ್ಚಿನ ವಾಹನಗಳನ್ನು ಒದಗಿಸಲಾದ ಹಿನ್ನಲೆಯಲ್ಲಿ ಅಕ್ಟೋಬರ್ 15 ಮತ್ತು 16ರಂದು ಸಹ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಲಾಗಿದೆ.
ಶುಕ್ರವಾರ ಚಿತ್ರದುರ್ಗದ ಮೂಳಕಾಲ್ಮೂರು ಮೂಲಕ ಭಾರತ್ ಜೋಡೋ ಯಾತ್ರೆ ಆಂಧ್ರ ಪ್ರದೇಶ ಪ್ರವೇಶಿಸಿದೆ. ಓಬಳಾಪುರಂ ಮೂಲಕ ಯಾತ್ರೆ ಸಂಜೆ ಕರ್ನಾಟಕದ ಬಳ್ಳಾರಿಗೆ ಆಗಮಿಸಲಿದೆ. ಬಳ್ಳಾರಿಯಲ್ಲಿ ಶನಿವಾರ ಬೃಹತ್ ಸಮಾವೇಶ ನಡೆಯಲಿದೆ.

ಪ್ರಯಾಣಿಕರು ಸಹಕಾರ ನೀಡಬೇಕು
ಬಳ್ಳಾರಿಯ ಕಾಂಗ್ರೆಸ್ ಸಮಾವೇಶಕ್ಕೆ ಹೊಸಪೇಟೆ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕರಾರು ಒಪ್ಪಂದದ ಮೇಲೆ ಹೆಚ್ಚಿನ ಬಸ್ಗಳನ್ನು ಒದಗಿಸಲಾದ ಹಿನ್ನಲೆಯಲ್ಲಿ ಅ.15 ಮತ್ತು ಅ.16ರಂದು ವಿಜಯನಗರ ಜಿಲ್ಲೆಯ ವಿವಿಧಡೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಹೊಸಪೇಟೆ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ತಾಲೂಕುಗಳಿಂದ ವಿವಿಧ ಸ್ಥಳಗಳಿಗೆ ತೆರಳಲಿರುವ ಪ್ರತಿದಿನದ ಬಸ್ ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯವಾಗಲಿದೆ ಎಂದು ಹೇಳಿದ್ದಾರೆ.

ಸಂಚಾರ ಮಾರ್ಗ ಬದಲಾಯಿಸಿದ ಪೊಲೀಸ್
ಬಳ್ಳಾರಿ ಜಿಲ್ಲೆಯಲ್ಲಿ ಅಕ್ಟೋಬರ್ 14 ಮತ್ತು ಅಕ್ಟೋಬರ್ 15ರಂದು ಭಾರತ್ ಜೋಡೋ ಪಾದಯಾತ್ರೆ, ವಾಸ್ತವ್ಯ, ಬಹಿರಂಗ ಸಭೆ ನಡೆಯಲಿದ್ದು, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ಹಾಗೂ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೆ ಆಗಮಿಸುವ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ನಗರದ ಹಲವು ಮಾರ್ಗದಲ್ಲಿ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

60 ಪ್ರಮುಖರಿಗೆ ಅವಕಾಶ
ಕಾಂಗ್ರೆಸ್ ಸಮಾವೇಶಕ್ಕಾಗಿ ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮುಖ್ಯ ವೇದಿಕೆಯಲ್ಲಿ 60 ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅಕ್ಕಪಕ್ಕದ ವೇದಿಕೆಯಲ್ಲಿ 150 ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಸುಮಾರು 3 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ.
ಶುಕ್ರವಾರ ಸಂಜೆ ಬಳ್ಳಾರಿಗೆ ಆಗಮಿಸುವ ರಾಹುಲ್ ಗಾಂಧಿ ಹಲಕುಂದಿ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಬೆಳಗ್ಗೆ 6.30ಕ್ಕೆ ಹಲಕುಂದಿಯಿಂದ ಪಾದಯಾತ್ರೆ ಆರಂಭವಾಗಿ ಬಳ್ಳಾರಿಗೆ ಆಗಮಿಸಲಿದೆ. ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯ ತನಕ ಸಮಾವೇಶ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದಾರೆ.

2055 ಪೊಲೀಸರ ಭದ್ರತೆ
ಬಳ್ಳಾರಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಶೋಕ್ ಗೆಹ್ಲೋಟ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 3ಎಎಸ್ಪಿ, 10 ಡಿವೈಎಸ್ಪಿ, 37 ಸಿಪಿಐ, 103 ಪಿಎಸ್ಐ ಸೇರಿದಂತೆ 351 ಅಧಿಕಾರಿಗಳು ಭದ್ರತೆ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ರಾಹುಲ್ ಗಾಂಧಿಗೆ ಪಾದಯಾತ್ರೆ ಹೊರಡುವ ಸ್ಥಳ, ವಾಸ್ತವ್ಯ ಹೂಡುವ ಸ್ಥಳ, ಸಮಾವೇಶದ ಸ್ಥಳದಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಡ್ರೋನ್ ಕ್ಯಾಮರಾ ಬಳಕೆ ನಿಷೇಧಿಸಲಾಗಿದೆ. ನಗರದ 9 ದಿಕ್ಕಿನಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.












Click it and Unblock the Notifications