ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.30ರವರೆಗೆ ಕೊರೊನಾ ಕರ್ಫ್ಯೂ ಜಾರಿ
ವಿಜಯನಗರ, ಏಪ್ರಿಲ್ 19: ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ "ಕೊರೊನಾ ಕರ್ಫ್ಯೂ' ಅನ್ನು ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು, ಉಳಿದಂತೆ ಎಲ್ಲಾ ಸೇವೆಗಳನ್ನು/ಸಂಚಾರಗಳನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ ಸಂಬಂಧಿಸಿದ ಕಾರ್ಮಿಕರು/ ನೌಕರರು, "ಕೊರೊನಾ ಕರ್ಫ್ಯೂ" ಅವಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು. ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.
ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ಮಾಡುವ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.