ಗ್ರಾ.ಪಂ. ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಬಳ್ಳಾರಿ ಡಿಸಿ ಸೂಚನೆ
ಬಳ್ಳಾರಿ, ಡಿಸೆಂಬರ್ 01: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ, ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಪರವಾನಗಿ ಹೊಂದಿರುವ ಎಲ್ಲರೂ ಶಸ್ತ್ರ ಮತ್ತು ಮದ್ದುಗುಂಡುಗಳನ್ನು ಇಟ್ಟುಕೊಂಡು ತಿರುಗಾಡುವುದರ ಮೇಲೆ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.
ಶಸ್ತ್ರಾಸ್ತ್ರಗಳ ಪರವಾನಗಿದಾರರು ತಕ್ಷಣವೇ ತಾವು ಹೊಂದಿದ ಶಸ್ತ್ರಾಸ್ತ್ರವನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು. ಶಸ್ತ್ರಾಸ್ತ್ರ ತಯಾರಕರು ಮತ್ತು ಮಾರಾಟಗಾರರು ಈ ನಿಷೇಧ ಅವಧಿಯವರೆಗೆ (ಡಿ.31ರವರೆಗೆ) ನಮೂನೆ 3 ಮತ್ತು 4ರಲ್ಲಿ ಹೊಂದಿದ ಪರವಾನಗಿದಾರರಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
2020 ಡಿ.31ರವರೆಗೆ ಪ್ರತಿ ದಿನ ತಮ್ಮ ಮಾರಾಟ ದಾಸ್ತಾನು ವ್ಯವಹಾರಗಳ ವಿವರವನ್ನು ಜಿಲ್ಲಾ ದಂಡಾಧಿಕಾರಿಗಳಿಗೆ ಒಪ್ಪಿಸಬೇಕು. ಪರವಾನಿಗೆದಾರರ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020 ಮುಕ್ತಾಯಗೊಂಡ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದ್ದು, 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ಹಾಗೂ ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.












Click it and Unblock the Notifications