ವಿಜಯನಗರ ಜಿಲ್ಲೆ ಅಂತಿಮ ಅಧಿಸೂಚನೆಗೆ ಸರ್ಕಾರಕ್ಕೆ ಒತ್ತಾಯ
ಬಳ್ಳಾರಿ, ಜನವರಿ 06: ನೂತನವಾಗಿ ವಿಜಯನಗರ ಜಿಲ್ಲೆ ರಚನೆ ಮಾಡುವ ಕುರಿತು ಅಂತಿಮ ಅಧಿಸೂಚನೆಯನ್ನು ಹೊರಡಿಸುವಂತೆ ಹಂಪಿಯ ಗಾಯತ್ರಿಪೀಠ ಮಹಾ ಸಂಸ್ಥಾನದ ದಯಾನಂದ ಪುರಿ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.
ಬುಧವಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೊಸಪೇಟೆ ತಾಲೂಕಿನ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿಗಳು, "ವಿಜಯನಗರ ಜಿಲ್ಲೆ ರಚನೆ ಹಲವು ವರ್ಷಗಳ ಬೇಡಿಕೆಯಾಗಿದೆ" ಎಂದರು.
"ಈ ಜಿಲ್ಲೆ ರಚನೆಯಿಂದ ಪಶ್ಚಿಮ ತಾಲೂಕುಗಳ ಜನರಿಗೆ ಅನುಕೂಲವಾಗಲಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ, ವಿಜಯನಗರ ಜಿಲ್ಲೆ ರಚನೆಗೆ ತಕ್ಷಣ ಅಂತಿಮ ಅಧಿಸೂಚನೆ ಹೊರಡಿಸಬೇಕು" ಎಂದು ದಯಾನಂದ ಪುರಿ ಸ್ವಾಮೀಜಿ ಆಗ್ರಹಿಸಿದರು.

"ಪಶ್ಚಿಮ ತಾಲೂಕುಗಳಿಗೆ ಬಳ್ಳಾರಿ ದೂರವಾಗುತ್ತದೆ. ಹೀಗಾಗಿ ರೈತರು, ಕಾರ್ಮಿಕರಿಗೆ ಹಾಗೂ ಸಾರ್ವಜನಿಕ ತೊಂದರೆಯಾಗುತ್ತಿದೆ. ಇದನ್ನ ತಪ್ಪಿಸಲು ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ನಮ್ಮ ಬೇಡಿಕೆಗೆ ಸ್ಪಂದಿಸಬೇಕು" ಎಂದರು.
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲು ಕರ್ನಾಟಕ ಸರ್ಕಾರ ಈಗಾಗಲೇ ಒಪ್ಪಿಗೆ ಕೊಟ್ಟಿದೆ. ಹೊಸ ಜಿಲ್ಲೆಯ ರಚನೆ ಕುರಿತು ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ವಿಜಯನಗರ ಜಿಲ್ಲೆ ರಚನೆಯ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಹಂಪಿಯ ಗಾಯತ್ರಿ ಪೀಠ ಮಹಾ ಸಂಸ್ಥಾನದ ದಯಾನಂದ ಪುರಿ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.#Vijayanagara #Dayanandapuriswamiji pic.twitter.com/0fEipW3xhE
— oneindiakannada (@OneindiaKannada) January 6, 2021
ಬಳ್ಳಾರಿಯನ್ನು ವಿಭಜನೆ ಮಾಡಿ ವಿಜಯನಗರವನ್ನು ಹೊಸ ಜಿಲ್ಲೆಯಾಗಿ ರಚನೆ ಮಾಡಲಾಗುತ್ತಿದೆ. ಹೊಸಪೇಟೆ ಹೊಸ ಜಿಲ್ಲೆಯ ಕೇಂದ್ರಸ್ಥಾನವಾಗಲಿದೆ. ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ ತಾಲೂಕುಗಳು ಹೊಸ ಜಿಲ್ಲೆಗೆ ಸೇರಲಿವೆ.
ಬಳ್ಳಾರಿ ಜಿಲ್ಲೆಗೆ ಬಳ್ಳಾರಿಯೇ ಕೇಂದ್ರ ಸ್ಥಾನ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಗಿ ತಾಲೂಕುಗಳು ಬಳ್ಳಾರಿ ಜಿಲ್ಲೆಯಲ್ಲಿ ಉಳಿದುಕೊಳ್ಳಲಿವೆ.












Click it and Unblock the Notifications