ಬಳ್ಳಾರಿ; ಕೋವಿಡ್ 3ನೇ ಅಲೆ ತಡೆಗೆ ಜಿಲ್ಲಾಡಳಿತದ ಸಿದ್ಧತೆಗಳು
ಬಳ್ಳಾರಿ, ಆಗಸ್ಟ್ 01; "ಕೋವಿಡ್ 2ನೇ ಅಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 60 ಸಾವಿರ ಪ್ರಕರಣಗಳು ದಾಖಲಾಗಿದ್ದವು. 8 ಸಾವಿರ ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 3ನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷವಾಗುವ ಸಾಧ್ಯತೆ ಇದೆ" ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೇಳಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಜಿಲ್ಲಾಧಿಕಾರಿಗಳು ನಡೆಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೊಮ್ಮಾಯಿ ಸಂಪುಟ; ಬಳ್ಳಾರಿ, ವಿಜಯನಗರದಲ್ಲಿ ಯಾರಿಗೆ ಸ್ಥಾನ?
"ಬಳ್ಳಾರಿ ಜಿಲ್ಲಾಡಳಿತ ಕೊರೊನಾ 3ನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ. ಅಗತ್ಯ ಬೆಡ್ ವ್ಯವಸ್ಥೆ, ಔಷಧೀಯ ವ್ಯವಸ್ಥೆ, ಮನೆ-ಮನೆ ಸಮೀಕ್ಷೆ, ಆರಂಭಿಕ ಹಂತದಲ್ಲಿಯೇ ಸೋಂಕು ಪತ್ತೆಹಚ್ಚಿ ಚಿಕಿತ್ಸೆ ನೀಡುವುದು, ನಿರ್ಬಂಧಗಳ ಪರಿಣಾಮಕಾರಿ ಜಾರಿ ಮಾಡುವುದು ಸೇರಿದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ" ಎಂದರು.
ವಿಶೇಷ ವರದಿ: ಬಳ್ಳಾರಿ ಜಿಲ್ಲೆ ಸಂಡೂರು ಮಂದಿಗೆ ಹೊಲದಲ್ಲೇ ಕೊರೊನಾವೈರಸ್ ಲಸಿಕೆ!?
"ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತರರಾಜ್ಯ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳೊಂದಿಗೆ ಈಗಾಗಲೇ ವಿಡಿಯೋ ಸಂವಾದ ನಡೆಸಿ ಸಲಹೆಗಳನ್ನು ನೀಡಿದ್ದಾರೆ. ಸ್ಥಳೀಯ ಸ್ಥಿತಿಗತಿ ಆಧರಿಸಿ ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ" ಎಂದು ತಿಳಿಸಿದರು.
ಕೊರೊನಾ 3ನೇ ಅಲೆ ಭೀತಿ ನಡುವೆಯೂ ಪ್ರಯಾಣಕ್ಕೆ ಸಜ್ಜಾಗಿದ್ದಾರೆ ಇಷ್ಟೊಂದು ಮಂದಿ
1 ಲಕ್ಷಕ್ಕೆ ಏರಿಕೆ ಸಾಧ್ಯತೆ; ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 1 ಲಕ್ಷ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಕೋವಿಡ್ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಈಗಾಗಲೇ 20 ಸಾವಿರ ಕೋವಿಡ್ ಕಿಟ್, 15 ಸಾವಿರ ರೆಮ್ಡಿಸೀವರ್ ಲಸಿಕೆ ಸೇರಿ ಅಗತ್ಯ ಔಷಧಿಗಳು ಜಿಲ್ಲೆಯಲ್ಲಿ ಇವೆ.
ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್, ಟ್ರಾಮಾಕೇರ್, ಹೊಸಪೇಟೆ ಎಂಸಿಎಚ್ ಆಸ್ಪತ್ರೆ, ಹರಪನಳ್ಳಿ, ಹಡಗಲಿ ಸೇರಿದಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯವಾದ ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ, ವಿಮ್ಸ್, ಟ್ರಾಮಾಕೇರ್ಗಳಲ್ಲಿ ಐಸಿಯು ಬೆಡ್ಗಳ ವ್ಯವಸ್ಥೆ ಹೆಚ್ಚಿಸಲಾಗುತ್ತಿದೆ ಮತ್ತು ಅಗತ್ಯ ಪ್ರಮಾಣದ ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ತರಕಾರಿ/ ಹಣ್ಣು ಮಾರುಕಟ್ಟೆ ಸ್ಥಳಾಂತರ; "ಈ ಬಾರಿಯೂ ಜನಸಂದಣಿ ಹೆಚ್ಚಿರುವ ತರಕಾರಿ ಮತ್ತು ಹಣ್ಣು ಮಾರುಕಟ್ಟೆಗಳ ಮಾರಾಟಗಾರರನ್ನು ವಿಶಾಲ ಮೈದಾನಗಳಿಗೆ ಸ್ಥಳಾಂತರಿಸಲಾಗುವುದು. ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ವಿಶಾಲ ಮೈದಾನಕ್ಕೆ ಮುಂದಿನ ವಾರ ಮಾರುಕಟ್ಟೆ ಸ್ಥಳಾಂತರ ಮಾಡಲಾಗುವುದು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಬಳ್ಳಾರಿಯ ಹುಸೇನ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಗಸ್ಟ್ 2ರಿಂದ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತದೆ. ಮುಂದಿನ ವಾರ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಸಿ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗುವುದು ಎಂದು ತಿಳಿಸಿದರು.
ಫೀವರ್ ಕ್ಲಿನಿಕ್ ಸ್ಥಾಪನೆ; ಜ್ವರ, ಕೆಮ್ಮು, ನೆಗಡಿ ಬಂದರೇ ನಿರ್ಲಕ್ಷ್ಯ ವಹಿಸದೇ ಫೀವರ್ ಕ್ಲಿನಿಕ್ಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಲು ಜನರು ಮುಂದಾಗಬೇಕು. ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ಕೋವಿಡ್ನಿಂದ ರಕ್ಷಣೆ ಪಡೆಯಲು ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕು, ಮಾಸ್ಕ್ ಧರಿಸಬೇಕು, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಕಾರ್ಯಾಚರಣೆ ನಡೆಸಿ, ದಂಡ ವಿಧಿಸಲು ಸೂಚಿಸಲಾಗಿದೆ.
ಬಳ್ಳಾರಿ ಎಸ್ಪಿ ಸೈದುಲು ಅಡಾವತ್ ಮಾತನಾಡಿ, "ಲಾಕ್ಡೌನ್ ಮುಗಿದಿದೆ ಎಂದರೇ ಕೊರೊನಾ ಹೋಗಿದೆ ಎಂಬ ಮನಸ್ಥಿತಿಯಲ್ಲಿ ಜನರು ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಮಾರ್ಗಸೂಚಿ ಪಾಲನೆ ಕುರಿತು ಪೊಲೀಸ್, ಕಂದಾಯ, ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಾಚರಣೆಗಳನ್ನು ಸೋಮವಾರದಿಂದ ನಡೆಸಲಾಗುತ್ತದೆ" ಎಂದರು.