ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ
ಬಳ್ಳಾರಿ, ಅಕ್ಟೋಬರ್ 10; ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. "ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು" ಎಂದು ಹೇಳಿದ್ದಾರೆ.

ಸಚಿವರು ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. "ಕಾರ್ಮಿಕರ ಕಾಯ್ದೆ, ಕಾನೂನಿನನ್ವಯ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಹಿತರಕ್ಷಣೆಗೆ ಸರ್ಕಾರವು ಬದ್ಧವಾಗಿದೆ" ಎಂದು ತಿಳಿಸಿದರು.
"ಬಾಲ ಕಾರ್ಮಿಕ ಪದ್ಧತಿಯು ಜಾಸ್ತಿಯಾಗುತ್ತಿದ್ದು, ಇದರ ನಿರ್ಮೂಲನೆಗೆ ವಿವಿಧ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಮತ್ತು ಮಾಧ್ಯಮದ ಮೂಲಕ ಹೆಚ್ಚೆಚ್ಚು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರುತಿಸಿ ಕಾರ್ಯಾಚರಣೆ ನಡೆಸುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡಿ, ಅವರನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರಬೇಕು" ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಎಸ್ಐ ಆಸ್ಪತ್ರೆ ನಿರ್ಮಾಣ; ಈ ಸಭೆಯಲ್ಲಿಯೇ ಜನಪ್ರತಿನಿಧಿಗಳು ಬಳ್ಳಾರಿ ಜಿಲ್ಲೆಯ ಇಎಸ್ಐ ಆಸ್ಪತ್ರೆಯ ವಿಷಯವನ್ನು ಪ್ರಸ್ತಾಪಿಸಿದರು. "ಸಿರುಗುಪ್ಪ ತಾಲ್ಲೂಕಿನಲ್ಲಿ 11 ರೈಸ್ಮಿಲ್ ಗಳಿವೆ, ಇಲ್ಲಿ ಸಾಕಷ್ಟು ಕೂಲಿ ಕಾರ್ಮಿಕರು ಸಂಖ್ಯೆ ಇದ್ದು, ಅವರ ಆರೋಗ್ಯ ರಕ್ಷಣೆಗೆ ಈ ಭಾಗದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಿಸಬೇಕು" ಎಂದು ಸಿರುಗುಪ್ಪ ಶಾಸಕ ಬಿ. ಎಂ. ನಾಗರಾಜ್ ಸಭೆಯಲ್ಲಿ ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್, "ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಕಾನೂನಿನನ್ವಯ ಸರ್ಕಾರದ ಗಮನ ಸೆಳೆಯಲಾಗುವುದು" ಎಂದು ಭರವಸೆಯನ್ನು ನೀಡಿದರು.
2017ರಲ್ಲಿಯೇ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಬಂಡಾರು ದತ್ತಾತ್ರೇಯ ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು. ಬಳ್ಳಾರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಬೇಕಿದೆ.
ಶಿವಮೊಗ್ಗ, ಮೈಸೂರಿನ ಹಾರೋಹಳ್ಳಿ, ಕೋಲಾರದ ನರಸಾಪುರ ಮತ್ತು ಬಳ್ಳಾರಿಯಲ್ಲಿ ತಲಾ 100 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆಯನ್ನು 100 ಹಾಸಿಗೆಯಾಗಿ ಉನ್ನತೀಕರಿಸಲಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದರು.
ಒಂದು ಕಾಲದಲ್ಲಿ ಗಣಿಗಾರಿಕೆಯಿಂದಾಗಿ ನಲುಗಿ ಹೋಗಿದ್ದ ಬಳ್ಳಾರಿಯಲ್ಲಿ ಸುಪ್ರೀಂಕೋರ್ಟ್ ಅಕ್ರಮ ಗಣಿಗಾರಿಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿತ್ತು. ಬಳಿಕ ಆರೋಗ್ಯ, ,ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಬಳ್ಳಾರಿ ಅಭಿವೃದ್ಧಿಯನ್ನು ಕಾಣುತ್ತಿದೆ.
ಗಣಿಗಾರಿಕೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ ಮತ್ತು ಗಣಿಗಾರಿಕೆಯಿಂದ ನಲುಗಿದ ಜನರಿಗಾಗಿ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದೆ. ಈಗ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡುವುದು ಬಾಕಿ ಇದೆ.












Click it and Unblock the Notifications