'ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು': ಗಾಲಿ ಜನಾರ್ದನ ರೆಡ್ಡಿ ಕಣ್ಣೀರು
ಬಳ್ಳಾರಿ, ಆಗಸ್ಟ್ 21: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಗುರುವಾರ ರಾತ್ರಿ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ವಿಧಿವಶರಾಗಿದ್ದಾರೆ. ಈ ದುಃಖದ ಸಂಗತಿಯನ್ನು ಹಂಚಿಕೊಂಡಿರುವ ಶ್ರೀರಾಮುಲು ಅವರ ಆಪ್ತ ಸ್ನೇಹಿತ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾವುಕ ಬರಹವೊಂದನ್ನು ಬರೆದಿದ್ದಾರೆ.
ನನ್ನ ಜೀವದ ಗೆಳೆಯ ಸಚಿವ ಬಿ. ಶ್ರೀರಾಮುಲು ತಾಯಿ ಬಿ.ಹೊನ್ನೂರಮ್ಮ ವಿಧಿವಶ... ಕೊರೊನಾದಿಂದ ಮುಕ್ತಿಯನ್ನು ಪಡೆದು ಜಯಿಸಿದರು, ಆದರೆ ಮೃತ್ಯುಂಜಯನನ್ನು ಜಯಿಸಲಿಲ್ಲ ನನ್ನ ತಾಯಿ. ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಬಿ. ಹೊನ್ನೂರಮ್ಮ (90) ಅವರು ನಿನ್ನೆ ರಾತ್ರಿ 11.30ಕ್ಕೆ ವಿಧಿವಶರಾದರು ಎಂದು ತಿಳಿಸಲು ವಿಷಾದಿಸುತ್ತೇನೆ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ಜನಾರ್ದನ ರೆಡ್ಡಿ ಅಂದು ಕಂಡ ಕನಸು ಈಗ ನನಸು
ತಾಯಿ ಹೊನ್ನೂರಮ್ಮ ಅವರು ಶ್ರೀರಾಮುಲು ಹಾಗೂ ನನ್ನನ್ನು ಇಬ್ಬರನ್ನೂ ತನ್ನ ಮಕ್ಕಳ ಹಾಗೆಯೇ ನೋಡಿಕೊಂಡಿದ್ದರು. ನಾವು ಇಬ್ಬರು ಬಾಲ್ಯ ಸ್ನೇಹಿತರಾದ ಕಾರಣ ನಾನು ಕಂಡಂತೆ ನನಗೆ ಅವರು ಶ್ರೀರಾಮುಲುಗಿಂತಲೂ ಹೆಚ್ಚಿನ ಪ್ರೀತಿಯನ್ನು ಕೊಟ್ಟು ಬೆಳೆಸಿದ್ದರು. ಆದರೆ ನಮ್ಮನ್ನು ಬೆಳೆಸಿದ ತಾಯಿ ಇಂದು ಇಹಲೋಕ ತ್ಯಜಿಸಿದರು ಎಂಬ ಸುದ್ದಿಯನ್ನು ಕೇಳಿ, ಮಾತು ಬಾರದಾಗಿ, ದುಃಖ ತಡೆಯಲಾಗುತ್ತಿಲ್ಲ. ಕಣ್ಣಂಚಿನಿಂದ ನೀರು ತನ್ನಷ್ಟಕ್ಕೆ ತಾನೇ ಹರಿಯುತ್ತಿದೆ. ಈ ವಿಷಯ ಕೇಳಿ ಇಡಿ ನಮ್ಮ ಕುಟುಂಬದಲ್ಲಿ ದುಃಖ ಆವರಿಸಿದೆ ಎಂದು ರೆಡ್ಡಿ ಹೇಳಿಕೊಂಡಿದ್ದಾರೆ.
ಜತೆಗೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಳ್ಳಾರಿಗೆ ತೆರಳಲು ಅವಕಾಶ ನೀಡದಿರುವ ಕಾನೂನಿನ ಬಗ್ಗೆ ಅಸಮಾಧಾನವನ್ನೂ ಹೊರಹಾಕಿದ್ದಾರೆ. ಮುಂದೆ ಓದಿ.
ಬಸ್ನಲ್ಲಿಯೇ ಓಡಾಡುತ್ತಿದ್ದರು
ನಾವು ಬಾಲ್ಯದಿಂದ ಬಡತನದಲ್ಲಿ ಬೆಳೆದು ಬಂದವರು. ನಂತರ ನಮಗೆ ಶ್ರೀಮಂತಿಕೆ, ಅಧಿಕಾರ ಬಂದಿರಬಹುದು. ಆದರೆ ನಮ್ಮ ತಾಯಿ ಯಾವತ್ತೂ ಅದನ್ನು ಅನುಭವಿಸಿದವರಲ್ಲ. ತಮ್ಮೂರು ಜೋಳದರಾಸಿಗೆ ಹೋಗಬೇಕಾದರೆ ಕಾರಿನಲ್ಲಿ ಹೋಗುತ್ತಿರಲಿಲ್ಲ. ನಾನು ಶ್ರೀರಾಮುಲು ಕೂಡಿಕೊಂಡು ಮನೆಯವರೆಗೆ ಕಾರು ತೆಗೆದುಕೊಂಡು ಹೋದರು ಅವರು ಕಾರಿನಲ್ಲಿ ಬರುತ್ತಿರಲಿಲ್ಲ. ಬಳ್ಳಾರಿಯಿಂದ ಬಸ್ಸಿನಲ್ಲಿಯೇ ಸಾಮಾನ್ಯರ ಹಾಗೆ ಪ್ರಯಾಣಿಸುತ್ತಿದ್ದರು. ಅಲ್ಲದೆ ಕೊನೆಯವರೆಗೂ ಜನ ಸಾಮಾನ್ಯರಲ್ಲಿ ತಾವು ಒಬ್ಬರು ಎಂಬಂತೆ ಸರಳವಾದ ಜೀವನವನ್ನು ನಡೆಸಿದ್ದರು.
ಸಚಿವರ ಕುರ್ಚಿಯಲ್ಲಿ ಕೂರಿಸಿದ್ದರು
ಶ್ರೀರಾಮುಲು ಅವರು ತಾಯಿಯ ಬಗ್ಗೆ ಅಪಾರ ಪ್ರೀತಿ ಗೌರವ ಹೊಂದಿದ್ದರು. ಶ್ರೀರಾಮುಲು ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದ ಸಂದರ್ಭದಲ್ಲಿ, ಅಧಿಕಾರ ವಹಿಸಿಕೊಳ್ಳುವಾಗ ತಾಯಿ ಹೊನ್ನೂರಮ್ಮ ಅವರನ್ನು ಬೆಂಗಳೂರಿನಲ್ಲಿರುವ ವಿಧಾನಸೌಧಕ್ಕೆ ಕರೆದುಕೊಂಡು ಬಂದು ಸಚಿವರ ಕುರ್ಚಿಯಲ್ಲಿ ಕೂರಿಸಿ, ನಂತರ ಅಧಿಕಾರ ಸ್ವೀಕಾರ ಮಾಡಿದ್ದರು. ಅಲ್ಲದೆ ಬೆಂಗಳೂರು ಹಾಗೂ ವಿಧಾನಸೌಧವನ್ನು ಮೊದಲ ಬಾರಿಗೆ ನೋಡಿದ ತಾಯಿ, ಆಶ್ಚರ್ಯಗೊಂಡು ಬೆರಗಾಗಿ ನಿಂತಿದ್ದರು.
ಹಿಂದೂ ಧರ್ಮದ ಪ್ರಸಿದ್ಧ ದೇವಾಲಯ ಚಿದಂಬರಂ ಬಗ್ಗೆ ಗಾಲಿ ರೆಡ್ಡಿ
ಮೃತ್ಯುವನ್ನು ಜಯಿಸಲು ಆಗಲಿಲ್ಲ
ಗೆಳೆಯ ಶ್ರೀರಾಮುಲು ಅವರು ತಾಯಿ ಹೊನ್ನೂರಮ್ಮ ಅವರಿಗೆ ಅತ್ಯಂತ ಪ್ರೀತಿಯ ಮಗನಾಗಿದ್ದರು. ಶ್ರೀರಾಮುಲು ಅವರಿಗೂ ತಾಯಿ ಬಗ್ಗೆ ಅಪಾರವಾದ ಪ್ರೀತಿ ಗೌರವ ಇತ್ತು. ಗೆಳೆಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ದೃಢವಾದ ಸಂದರ್ಭದಲ್ಲಿಯೇ ತಾಯಿ ಹೊನ್ನೂರಮ್ಮ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಆದರೆ ಸಚಿವ ಶ್ರೀರಾಮುಲು ಅವರು ಚಿಕಿತ್ಸೆ ಪಡೆದ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ತಾಯಿಯನ್ನು ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದರು. ನಂತರ ಅವರು ಕೋರೋನಾದಿಂದ ಮುಕ್ತಿಯನ್ನು ಪಡೆದು ಜಯಿಸಿ ಬಂದಿದ್ದರು. ಆದರೆ ಅವರು ಮೃತ್ಯುವನ್ನು ಜಯಸಿ ಬರಲಿಲ್ಲವಲ್ಲ ಎಂಬ ನೋವು ನಮ್ಮೆನ್ನೆಲ್ಲಾ ಕಾಡುತ್ತಿದೆ.
ಕಾನೂನು ನನ್ನನ್ನು ಕಟ್ಟಿಹಾಕಿದೆ
ತಾಯಿಯ ಅಗಲಿಕೆಯಿಂದ ದುಃಖ ತಡೆಯಲಾಗುತ್ತಿಲ್ಲ. ಜೀವದ ಗೆಳೆಯ ಶ್ರೀರಾಮುಲುಗೆ ಹೇಗೆ ಸಂತೈಸಲಿ, ಈ ಸಂದರ್ಭದಲ್ಲಿಯೂ ಕಾನೂನು ನನ್ನನ್ನು ಕಟ್ಟಿಹಾಕಿದೆ. ಬಳ್ಳಾರಿಗೆ ಹೋಗದ ಅಸಹಾಯಕತೆ ನನ್ನದು. ತಾಯಿಯ ದರ್ಶನವನ್ನು ನಾನು ವಿಡಿಯೋ ಕರೆಯ ಮೂಲಕ ಪಡೆದುಕೊಳ್ಳುವ ಅನಿವಾರ್ಯತೆ ಬಂದಿದೆ. ಈ ನೋವು ನನ್ನನ್ನು ಮತ್ತಷ್ಟು ಕಾಡುತ್ತಿದೆ ಎಂದು ನೋವು ವ್ಯಕ್ತಪಡಿಸಿದ್ದಾರೆ.
ಚಿರಶಾಂತಿ ದೊರಕಲಿ
ಕೊನೆಯದಾಗಿ ನನ್ನ ಗೆಳೆಯನಿಗೆ ಹಾಗೂ ಆತನ ಕುಟುಂಬದ ಸದಸ್ಯರಿಗೆ ತಾಯಿಯ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ. ನನ್ನ ತಾಯಿಯ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಭಾವುಕ ಮಾತುಗಳನ್ನು ಜನಾರ್ದನ ರೆಡ್ಡಿ ಹಂಚಿಕೊಂಡಿದ್ದಾರೆ.