ಬಳ್ಳಾರಿ ವಿಮ್ಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ
ಬೆಂಗಳೂರು, ಸೆಪ್ಟೆಂಬರ್ 16: ವಿದ್ಯುತ್ ವ್ಯತ್ಯಯ ಉಂಟಾಗಿ ಆಕ್ಸಿಜನ್ ಪೂರೈಕೆಯಾಗದೇ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೃತಪಟ್ಟ ಮೂವರು ರೋಗಿಗಳ ಕುಟುಂಬಕ್ಕೆ ಕರ್ನಾಟಕ ಸರಕಾರ ತಲಾ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ವಿಮ್ಸ್ನಲ್ಲಿ ವಿದ್ಯುತ್ ಕೈಕೊಟ್ಟು, ಆಮ್ಲಜನಕ ಪೂರೈಕೆಯಾಗದೇ ತೀವ್ರ ನಿಗಾ ಘಟಕದಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಭಾರಿ ವೈರಲ್ ಆಗಿತ್ತು. ನಂತರ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ವಿಮ್ಸ್ ನಿರ್ದೇಶಕ ಗಂಗಾಧರ ಗೌಡ, ವಿದ್ಯುತ್ ಕೈಕೊಟ್ಟಿದ್ದರಿಂದ ರೋಗಿಗಳು ಸಾವನ್ನಪ್ಪಿಲ್ಲ, ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆಗಳಿಂದ ಸಂಭವಿಸಿವೆ.
ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ, ಇನ್ನೊಬ್ಬ ಮೃತರು ಬಹು ಅಂಗಾಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ, ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಹಾಗೆಯೇ ಮತ್ತೊಬ್ಬ ರೋಗಿಯು ಹಲವಾರು ದಿನಗಳಿಂದ ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದು ಕೊನೆಗೆ ಬಹು ಅಂಗಾಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದರು ಎಂದು ಹೇಳಿಕೆ ನೀಡಿದ್ದರು.

ಬುಧವಾರ ಬೆಳಗ್ಗೆ ರೋಗಿಗಳ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದೆ. ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಹೇಳಿಕೆ ನೀಡಿದ್ದಾರೆ.
ತನಿಖೆಗೆ ಸಮಿತಿ ರಚನೆ
ವಿಮ್ಸ್ನಲ್ಲಿ ಸಂಭವಿಸಿರುವ ಸಾವುಗಳ ಕುರಿತು ತನಿಖೆ ನಡೆಸಲು ಬೆಂಗಳೂರು ವೈದ್ಯಕೀಯ ಕಾಲೇಜಿನ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕಿ ಡಾ. ಸ್ಮಿತಾ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಮಿತಿ ರಚಿಸಲಾಗಿದೆ. ಈ ಉನ್ನತಮಟ್ಟದ ಸಮಿತಿಯಲ್ಲಿ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಡಾ. ಸ್ಮಿತಾ ಅವರನ್ನು ಅಧ್ಯಕ್ಷರಾಗಿ, ಜಂಟಿ ನಿರ್ದೇಶಕ ಡಾ. ಸಿದ್ದಿಕಿ, ಜನರಲ್ ಮೆಡಿಸಿನ್ ವಿಭಾಗದ ಡಾ. ದಿವಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಪಾಲಕ ಅಭಿಯಂತರು ಯೋಗೇಶ್ ಹಾಗೂ ವೈದ್ಯಕೀಯ ಶಕ್ಷಿಣ ನಿರ್ದೇಶಶನಾಲಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಉಮಾರನ್ನು ಸದಸ್ಯರಾಗಿದ್ದಾರೆ.












Click it and Unblock the Notifications