ವೇದಿಕೆ ಕಾರ್ಯಕ್ರಮವಿಲ್ಲದೆ ಈ ಬಾರಿ ಹಂಪಿ ಉತ್ಸವ ಆಚರಣೆ!
ಬಳ್ಳಾರಿ, ನ. 05: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಇದೇ ನವೆಂಬರ್ 13ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ. ಪ್ರತಿವರ್ಷ ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಅತ್ಯಂತ ವಿಜೃಂಭಣೆಯಿಂದ ಹಂಪಿ ಉತ್ಸವ ನಡೆಸಲಾಗುತ್ತಿತ್ತು. ಆದರೇ ಈ ಬಾರಿ ಕೋವಿಡ್-19 ನಿಂದಾಗಿ ನ. 13ರಂದು ಒಂದು ದಿನ ಸರಳ ಹಾಗೂ ಸಾಂಕೇತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ರೀತಿಯ ಜನಪದ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ. ಪ್ರತಿ ತಾಲೂಕಿನಿಂದ ಎರಡೆರಡು ಕಲಾತಂಡಗಳು ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ವಿವರಿಸಿದ್ದಾರೆ.
Recommended Video
ಶೋಭಾಯಾತ್ರೆ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾಭದ್ರಾ ನದಿ ದಡದಲ್ಲಿ ತುಂಗಾ ಆರತಿ ನಡೆಯಲಿದೆ. ಯಾವುದೇ ರೀತಿಯ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಚಿವರು ವಿವರಿಸಿದ್ದಾರೆ.