ಬಳ್ಳಾರಿ: ಶಿಕ್ಷಣ ಇಲಾಖೆ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಸರ್ಕಾರಿ ಶಾಲೆ
ಬಳ್ಳಾರಿ, ಅಕ್ಟೋಬರ್ 1: ಕೊರೊನಾ ಮಹಾಮಾರಿ ಅಟ್ಟಹಾಸ ನಡೆಸುತ್ತಿರುವ ಈ ಸಮಯದಲ್ಲಿ ಶಾಲೆಯನ್ನು ಯಾವಾಗ ಆರಂಭ ಮಾಡಬೇಕು ಎನ್ನುವ ಬಹುದೊಡ್ಡ ಚರ್ಚೆ ನಡೆಯುತ್ತಿದೆ. ಆದರೆ ಗಣಿನಾಡು ಬಳ್ಳಾರಿಯಲ್ಲಿ ಸರ್ಕಾರಿ ಶಾಲೆಯೊಂದು ಆರಂಭವಾಗಿದೆ.
ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಜಾರಿ ಮಾಡಿ ಮಕ್ಕಳನ್ನು ಶಾಲೆಯಿಂದ ದೂರ ಉಳಿಯದಂತೆ ವಠಾರ ಶಾಲೆ ಆರಂಭ ಮಾಡಿದೆ. ಆದರೆ ಬಳ್ಳಾರಿ ದುರ್ಗಮ್ಮ ದೇವಸ್ಥಾನದ ಬಳಿ ಇರುವ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಿದ್ದಾರೆ.
ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳ ಜೀವದ ಜೊತೆಯಲ್ಲಿ ಇಲ್ಲಿನ ಶಿಕ್ಷಕರು ಚೆಲ್ಲಾಟ ಆಡುತ್ತಿದ್ದಾರೆ. ಶಾಲಾ ಕೊಠಡಿಯ ಒಳಗಡೆಯೇ ಮಕ್ಕಳನ್ನು ಕೂರಿಸಿ ಪಾಟ ಮಾಡುತ್ತಿದ್ದಾರೆ. ಇನ್ನು ವಿಪರ್ಯಾಸವೆಂದರೆ ಪಾಠ ಮಾಡುವ ಶಿಕ್ಷಕರೇ ಮಾಸ್ಕ್ ಹಾಕಿಲ್ಲವೆಂಬುದು ದುರಂತ.

ಶಾಲೆ ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇಡೀ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಕೊರೊನಾ ವೈರಸ್ ಈಗ ಮತ್ತೆ ಹೆಚ್ಚಾಗುತ್ತಿದೆ. ಈ ಸಂದರ್ಭಧಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದವು. ಜೊತೆಗೆ ಶಾಲೆಗಳನ್ನು ಆತುರದಲ್ಲಿ ಆರಂಭಿಸಬಾರದು ಎಂದೂ ವಿಪಕ್ಷಗಳು ಒತ್ತಾಯಿಸಿದ್ದವು.

ಕೊರೊನಾ ವೈರಸ್ ಹರಡುವ ಆತಂಕದಿಂದ ವಿಧಾನಸಭೆಯ ಅಧಿವೇಶನವನ್ನು ಮುಂದೂಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದರು. ಇದೀಗ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 15ರ ವರೆಗೆ ವಿದ್ಯಾರ್ಥಿಗಳು ಶಾಲೆಗೆ ಬರುವುದು ಬೇಡ ಎಂದು ಸೂಚಿಸಿದೆ.












Click it and Unblock the Notifications