ಬಳ್ಳಾರಿ ಲಾಕ್ ಡೌನ್ ಮಾಡುವಂತೆ ಬರುತ್ತಿದೆ ಭಾರೀ ಒತ್ತಡ
ಬಳ್ಳಾರಿ, ಜುಲೈ 20: ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರೀತವಾಗಿ ಹರಡುತ್ತಿರುವ ಕಾರಣ ಜಿಲ್ಲೆಯಲ್ಲೂ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಒತ್ತಾಯಿಸಿದ್ದಾರೆ.
Recommended Video
ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2200ಕ್ಕೆ ತಲುಪಿದೆ. ಅಷ್ಟೇ ಅಲ್ಲ, ಸೋಂಕಿನಿಂದ 54 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವಂತೆ ಎಲ್ಲೆಡೆ ವ್ಯಾಪಕ ಕೂಗು ಕೇಳಿಬರುತ್ತಿತ್ತು. ಇದೀಗ ಶಾಸಕ ಭೀಮಾನಾಯ್ಕ ಕೂಡ ಈ ಬಗ್ಗೆ ದನಿ ಎತ್ತಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ವಾರದ ನಂತರ ಲಾಕ್ ಡೌನ್ ನಿರ್ಧಾರ?
ವಿಶ್ವ ಆರೋಗ್ಯ ಸಂಸ್ಥೆ ಮತ್ತು ICMR ಅಗಸ್ಟ್ ತಿಂಗಳಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಪತ್ತೆ ಆಗುತ್ತದೆ ಎಂದಿರುವ ಮಾಹಿತಿಯನ್ನು ಪತ್ರದಲ್ಲಿ ಉಲ್ಲೇಖಿಸಿರುವ ಶಾಸಕರು, ಮುಂಜಾಗ್ರತಾ ಕ್ರಮವಾಗಿ ಲಾಕ್ ಡೌನ್ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳೆದ ಬಾರಿ ಮಾಡಿದಂತೆ ಕನಿಷ್ಠ ಹದಿನಾಲ್ಕು ಅಥವಾ ಇಪ್ಪತ್ತೊಂದು ದಿನಗಳ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಹರಡುವಿಕೆ ತಡೆಗಟ್ಟಲು ಮತ್ತು ನಿರ್ವಹಣಾ ಕೆಲಸಗಳನ್ನು ಮಾಡಲು ಜಿಲ್ಲೆಯನ್ನು ಲಾಕ್ ಡೌನ್ ಮಾಡುವುದೇ ಸೂಕ್ತ ಎಂದು ಒತ್ತಾಯಿಸಿದ್ದಾರೆ.