ಜನಾರ್ದನ ರೆಡ್ಡಿ, ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬೇಡಿ: ಟಪಾಲ್
ಬಳ್ಳಾರಿ, ಜುಲೈ 29: ಬಳ್ಳಾರಿಯ ಜನಾರ್ದನ ರೆಡ್ಡಿ, ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬಾರದು ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಬಳ್ಳಾರಿಯಲ್ಲಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಬಿಜೆಪಿ ಬಹುಮತ ಸಾಬೀತು ಮಾಡಿದ್ದು, ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಮುಂದೆ ಬಳ್ಳಾರಿಯ ರೆಡ್ಡಿ ಟೀಮ್ ಹಾಗೂ ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ಅಕ್ರಮ ಗಣಿಗಾರಿಕೆ , ಗಡಿನಾಶ, ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಅಪಕೀರ್ತಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಇದೆ. 2008ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ಜನಾರ್ದನ ರೆಡ್ಡಿ, ಶ್ರೀರಾಮುಲು ಏನೆಲ್ಲಾ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಅಲ್ಲದೆ ಅಕ್ರಮ ಗಣಿಗಾರಿಕೆಯಲ್ಲಿ ಶ್ರೀರಾಮುಲು ಹೆಸರಿಲ್ಲ. ಆದರೆ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಒಂದೇ ಜೀವ ಇದ್ದಂತೆ ಎಂದಿದ್ದಾರೆ.
ಶ್ರೀರಾಮುಲುಗೆ ಕೊಟ್ಟರೆ ರೆಡ್ಡಿ ಸಚಿವನಾದ ಹಾಗೇ. ಆದ್ದರಿಂದ ಶ್ರೀರಾಮುಲು ಅಷ್ಟೇ ಅಲ್ಲ, ಆ ತಂಡದಲ್ಲಿ ಇರುವ ಸೋಮಶೇಖರ್ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಇನ್ನು ಅವರ ಬದಲಿಗೆ ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಉಳಿವಿದೆ ಎಂದು ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಡಿಯೋ ರೆಕಾರ್ಡ್ ಮಾಡಿ, ಮನವಿ ಮಾಡಿದ್ದಾರೆ.