ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ; ಖಡಕ್ ಎಚ್ಚರಿಕೆ ಕೊಟ್ಟ ಪಾಲಿಕೆ
ಬಳ್ಳಾರಿ, ಫೆಬ್ರವರಿ 28; ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು ಎಂಬ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈಗ ವ್ಯಾಣಿಜ್ಯ ಉದ್ಯಮಿದಾರರಿಗೆ ಮಹಾನಗರ ಪಾಲಿಕೆ ಈ ಕುರಿತು ಖಡಕ್ ಎಚ್ಚರಿಕೆಯನ್ನು ನೀಡಿದೆ.
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎಸ್. ಖಲೀಲ್ಸಾಬ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು ಎಂದು ಸೂಚಿಸಲಾಗಿದೆ.
ಮಾರ್ಚ್ 3ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯಪಾಲರ ಒಪ್ಪಿಗೆ: ನಾಮಫಲಕದಲ್ಲಿ ಕನ್ನಡ ಕಡ್ಡಾಯದ ಕುರಿತು ರಾಜ್ಯಪತ್ರದಲ್ಲಿ ಆದೇಶ ಪ್ರಕಟಿಸಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ )ವಿಧೇಯಕ, 2024 ಇದಕ್ಕೆ ಫೆಬ್ರವರಿ 25ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 07 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ)ಅಧಿನಿಯಮ, 2024 ಫೆಬ್ರವರಿ 25ರಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ. ಇನ್ನು ಮುಂದೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು (2023ರ ಕರ್ನಾಟಕ ಅಧಿನಿಯಮ ಸಂಖ್ಯೆ 13)ನ್ನು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯಲಾಗುತ್ತದೆ. ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು ಎಂದು ಹೇಳಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ಅನ್ನು (2023ರ ಕರ್ನಾಟಕ ಅಧಿನಿಯಮ ಸಂಖ್ಯೆ 13)ರ (ಇದರಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 7ನೇ ಪ್ರಕರಣದ, (2)ನೇ ಉಪಪ್ರಕರಣದಲ್ಲಿರುವ (ಎ) ಖಂಡದ (vii)ನೇ ಬಾಬುವಿಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು. ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ - ಸದಸ್ಯ ಕಾರ್ಯದರ್ಶಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಇವರು ಸಮಿತಿಯ ಸಂಚಾಲಕರಾಗಿರತಕ್ಕದ್ದು.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು 60% ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಎಂದು ನಿಯಮ ಹೇಳಿದೆ.












Click it and Unblock the Notifications