ಚುನಾವಣೆ; ಗಡಿ ಜಿಲ್ಲೆಯ ಬಳ್ಳಾರಿಯಲ್ಲಿ 18 ಚೆಕ್ಪೋಸ್ಟ್ ಸ್ಥಾಪನೆ
ಬಳ್ಳಾರಿ, ಮಾರ್ಚ್ 27; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು, ಚುನಾವಣಾ ಅಕ್ರಮಗಳನ್ನು ತಡೆಯಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಅನಂತಪುರ ಮತ್ತು ಕರ್ನೂಲ್ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಬಳ್ಳಾರಿಯಲ್ಲಿ ಅಕ್ರಮ ತಡೆಯಲು ಒಟ್ಟು 18 ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಈ ಕುರಿತು ಮಾಹಿತಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ಮತ್ತು ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಅಕ್ರಮ ಇಲ್ಲದಂತೆ ಕಟ್ಟುನಿಟ್ಟಾಗಿ ಚುನಾವಣೆ ಎದುರಿಸಲು, ಜಿಲ್ಲಾ ವ್ಯಾಪ್ತಿಯಲ್ಲಿ 18 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಅಂತರರಾಜ್ಯ 11, ಅಂತರ್ ಜಿಲ್ಲೆ 5, ಜಿಲ್ಲಾ ವ್ಯಾಪ್ತಿಯಲ್ಲಿ 2 ಚೆಕ್ಪೋಸ್ಟ್ ತೆರೆದು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ದಿನದ 24 ಗಂಟೆಯೂ ವಾಹನಗಳ ಮತ್ತು ಸಂಶಯಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಎಸ್ಪಿ ವಿವರಣೆ ನೀಡಿದ್ದಾರೆ.
ಪಕ್ಕದ ರಾಜ್ಯದೊಂದಿಗೆ ಸಭೆ; ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅನಂತಪುರ ಮತ್ತು ಕರ್ನೂಲ್ ಜಿಲ್ಲೆಯ ಕಂದಾಯ ಮತ್ತು ಪೊಲೀಸ್ ಇಲಾಖೆ, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಸಭೆಯನ್ನು ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 52 ಗಡಿಭಾಗದ ಹಳ್ಳಿಗಳು, ರಸ್ತೆ ಮೂಲಕ ಅಕ್ರಮ ಸಾಗಾಣಿಕೆ ನಡೆಯುವ ಸಾಧ್ಯತೆಗಳ ಹಿನ್ನಲೆಯಲ್ಲಿ ಸಕಾಲಕ್ಕೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು, ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 2 ವಾರಗಳಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳ, ಮತದಾರರಿಗೆ ಉಚಿತ ಆಮಿಷಗಳನ್ನು ಒಡ್ಡುವರರ ಬಗ್ಗೆ, ಅಕ್ರಮ ಮದ್ಯ ಸಾಗಾಣಿಕೆ ಮತ್ತು ವಾರಸುದಾರರಿಲ್ಲದ ವಸ್ತುಗಳ ಮೇಲೆ ದಾಳಿ ಮಾಡಿ, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಚುನಾವಣೆಗೆ ಸಂಬಂಧಿಸಿದಂತೆ ನೆರೆಯ ಜಿಲ್ಲೆಗಳಾದ ವಿಜಯನಗರ, ಚಿತ್ರದುರ್ಗ, ಕೊಪ್ಪಳ, ರಾಯಚೂರು ಮತ್ತು ಗಡಿಭಾಗದ ಆಂಧ್ರ ಪ್ರದೇಶ, ಅನಂತಪುರ ಹಾಗೂ ಕರ್ನೂಲು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈಗಾಗಲೇ ಜಿಲ್ಲಾ ಗಡಿ ಅಪರಾಧ ಸಭೆಗಳನ್ನು ವಿಡಿಯೋ ಸಂವಾದದ ಮೂಲಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮತ್ತು ಇತರೆ ಜಿಲ್ಲೆಯಲ್ಲಿರುವಂತಹ ಎನ್.ಬಿ.ಡಬ್ಲ್ಯೂ ವ್ಯಕ್ತಿಗಳು, ರೌಡಿಶೀಟರ್ಗಳು, ಸಂಶಯುತ ಗಲಭೆ ಮಾಡುವಂತಹ ವ್ಯಕ್ತಿಗಳು ಮತ್ತು ಗಡಿ ಭಾಗದ ಗ್ರಾಮಗಳಲ್ಲಿ ನಡೆಯುವ ಚಟುವಟಿಕೆಗಳು ಮತ್ತು ಗಡಿ ತಪಾಸಣೆ ಚೆಕ್ಪೋಸ್ಟ್ಗಳಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಪರಸ್ಪರ ಸಹಕಾರ ಮತ್ತು ಮಾಹಿತಿಗಳ ವಿನಿಮಯ ಮಾಡಿಕೊಳ್ಳಲಾಗಿದೆ.
ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ವಿವಿಧ ಠಾಣೆಗಳಲ್ಲಿ ಏರಿಯಾ ಡಾಮಿನೇಷನ್ ಪ್ರತಿದಿನ ನಿರ್ವಹಿಸಲಾಗುತ್ತಿದೆ. ಈ ಸಮಯದಲ್ಲಿ ವಾಹನ ತಪಾಸಣೆ, ರೌಡಿಗಳ ತಪಾಸಣೆ, ಸಂಶಯಾಸ್ಪದ ವ್ಯಕ್ತಿಗಳ ತಪಾಸಣೆ, ಕೋಟ್ಪಾ ಅಬಕಾರಿ ಪ್ರಕರಣಗಳು ಮತ್ತು ಕೆ.ಪಿ.ಆಕ್ಟ್ ಅಡಿಯಲ್ಲಿ ಕ್ರಮ ಜರುಗಿಸುವುದು, ವಾರೆಂಟ್ ಆಸಾಮಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಕೆಲಸ ಮಾಡಲಾಗುತ್ತಿದೆ. ಬಳ್ಳಾರಿ ನಗರ ಸಂಚಾರ ವ್ಯಾಪ್ತಿಯಲ್ಲಿ 2 ಸಂಚಾರಿ ದೀಪಗಳನ್ನು ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಕಡೆ ಸೈನ್ ಬೋರ್ಡ್ಗಳನ್ನು ಅಳವಡಿಸಲಾಗಿರುತ್ತದೆ.
ಕೇಂದ್ರ ಚುನಾವಣೆ ಆಯೋಗವು ಹೊರಡಿಸುವ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೆ ಆಯುಧಗಳನ್ನು ಪರವಾನಿಗೆದಾರರು ಸಾರ್ವಜನಿಕ ಸ್ಥಳಗಳಲ್ಲಿ ಬಳಕೆ ಮಾಡುವುದು ನಿಷೇಧಿಸಲಾಗಿದೆ. ಪರವಾನಿಗೆದಾರರು ತಕ್ಷಣ ತಾವು ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.












Click it and Unblock the Notifications