ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: 150 ಸೀಟಿನ ಹುರುಪಿಗೆ ಪರ್ಸೆಂಟೇಜ್ ಹೊಡೆತ
ವಿಜಯನಗರ, ಏ.16: ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಭೆ ಆರಂಭಗೊಳ್ಳುತ್ತಿದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವುದರಿಂದ ಈಗಾಗಲೇ ಗುರಿ ನೀಡಲಾದ 150 ಸೀಟುಗಳನ್ನು ಗೆಲ್ಲುವ ನಾಗಾಲೋಟಕ್ಕೆ ಮತ್ತಷ್ಟು ಪುಷ್ಠಿ ನೀಡುವ ಪ್ರಯತ್ನ ಮಾಡಲಾಗುತ್ತದೆ.
ಪ್ರತಿ ಮೂರು ತಿಂಗಳಿಗೆ ಒಮ್ಮೆ ಬಿಜೆಪಿ ಕಾರ್ಯಕಾರಿಣಿ ನಡೆಯುತ್ತದೆ. ಪ್ರಾದೇಶಿಕತೆಯ ದೃಷ್ಟಿಯಿಂದ ಕಳೆದ ಬಾರಿ ದಾವಣಗೆರೆಯಲ್ಲಿ ನಡೆಸಿದರೆ, ಈ ಬಾರಿ ಹೋಸಪೇಟೆಯಲ್ಲಿ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕರಲ್ಲಿ ಗೆದ್ದು ಬೀಗುತ್ತಿರುವ ಬಿಜೆಪಿ ಕರ್ನಾಟಕದಲ್ಲಿಯೂ ಸಹ 150 ಸೀಟುಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿದೆ. ಇದು ಚುನಾವಣೆ ವರ್ಷ ಆಗಿರುವುದರಿಂದ ಕೇಂದ್ರದ ನಾಯಕರೂ ಸಹ ಕಾರ್ಯಕಾರಿಣಿಯತ್ತ ಬರುತ್ತಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಲ್ಲಿ ಮತ್ತಷ್ಟು ಹುರುಪು ತುಂಬಿದೆ.
ಪರ್ಸೆಂಟೇಜ್ ಹೊಡೆತ:
ರಾಜ್ಯ ಬಿಜೆಪಿ ಕೊಂಚ ಮಟ್ಟಿಗೆ ಹುರುಪಿನಲ್ಲಿಯೇ ಇತ್ತು. ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ಚುನಾವಣೆಗೆ ತಯಾರಿ, ಬಿಜೆಪಿ ನೆಲೆ ಇಲ್ಲದ ಭಾಗಗಳಲ್ಲಿ ಪಕ್ಷದ ಸಂಘಟನೆ ಮಾಡುವುದು ಮತ್ತು ಸಚಿವ ಸಂಪುಟ ವಿಸ್ತರಣೆಯಂತಹ ಪ್ರಮುಖ ವಿಷಯಗಳು ಚರ್ಚೆಯಾಗಬೇಕಿತ್ತು. ಆದರೆ, ಈ ವಾರ ನಡೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮತ್ತು ಆತ ಮಾಡಿದ ಸಂಪುಟದ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಮೇಲಿನ 40 ಪರ್ಸೆಂಟ್ ಲಂಚದ ಆರೋಪ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಪರ್ಸೆಂಟೇಜ್ ಹಗರಣದಿಂದಾಗಿ ಬಿಜೆಪಿ ಕಾರ್ಯಕಾರಿಣಿಯ ಒಂದು ದಿನ ಮುಂಚೆಯೇ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಿಜೆಪಿಗೆ ಆದ ಹಿನ್ನಡೆಯೇ ಸರಿ.

ಸರ್ಕಾರದ ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ಲಂಚದ ವಿಷಯವನ್ನೇ ಕಾಂಗ್ರೆಸ್ ಈಗ ಪ್ರಮುಖ ಅಸ್ತ್ರವಾಗಿಸಿಕೊಂಡಿದೆ. ಎರಡು ದಿನ ಪಟ್ಟು ಹಿಡಿದು ಪ್ರತಿಭಟನೆ ನಡೆಸಿ ಈಶ್ವರಪ್ಪ ಅವರ ರಾಜೀನಾಮೆಗೆ ಕಾರಣವಾಗಿದೆ. ಇದೇ ವಿಷಯದೊಂದಿಗೆ ಎಂಟು ತಂಡಗಳನ್ನು ಕಟ್ಟಿಕೊಂಡು ರಾಜ್ಯ ಪ್ರವಾಸ ಕೈಗೊಳ್ಳುತ್ತಿದೆ. ಇದು ಬಿಜೆಪಿಯ ನಾಗಾಲೋಟಕ್ಕೆ ತಡೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಜೆಪಿ ನಡ್ಡಾ ಪಾಲ್ಗೊಳ್ಳುತ್ತಾರೆ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇದೇ ಮೊದಲ ಬಾರಿಗೆ ಕರ್ನಾಟಕದ ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕೊನೆಯ ದಿನ ಅಂದರೆ ಭಾನುವಾರ (ಏ.17) ಹೊಸಪೇಟೆಗೆ ಬಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ. ಉಳಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಹಲವರು ಕಾರ್ಯಕಾರಿಣಿಯಲ್ಲಿ ಇರುತ್ತಾರೆ.

ಮುಂದಿನ ಚುನಾವಣೆಗೆ ದಿಕ್ಸೂಚಿ:
'ಬಿಜೆಪಿ ಕಾರ್ಯಕಾರಿಣಿಯಲ್ಲಿ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಎಲ್ಲಾ ಜಿಲ್ಲಾಧ್ಯಕ್ಷರು ಸಹಿತ ಸುಮಾರು 650 ಜನರು ಪಾಲ್ಗೊಳ್ಳುತ್ತಾರೆ. ವಿಜಯನಗರ ಗತವೈಭವ ಸಾರುವಂತಹ ವೇದಿಕೆಗಳನ್ನು ನಿರ್ಮಿಸಲಾಗಿದೆ. ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕಾರಿಣಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಆಗಲಿದೆ' ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೊಸಪೇಟೆಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.












Click it and Unblock the Notifications