ಡಿವೈಎಸ್ಪಿ ಅನುಪಮಾ ವರ್ಗಾವಣೆ ಖಂಡಿಸಿ ಕೂಡ್ಲಿಗಿ ಬಂದ್
ಬಳ್ಳಾರಿ, ಜನವರಿ 30 : ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕೂಡ್ಲಿಗಿ ಬಂದ್ಗೆ ಕರೆ ನೀಡಿವೆ. ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ರಾಜೀನಾಮೆ ಪಡೆಯಬೇಕು. ಅನುಪಮಾ ಶೆಣೈ ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಪುನಃ ಕೂಡ್ಲಿಗಿಗೆ ನೇಮಕ ಮಾಡಬೇಕು ಎಂದು ವಿವಿಧ ಸಂಘಟನೆಗಳ ಸದಸ್ಯರು ಒತ್ತಾಯಿಸುತ್ತಿದ್ದಾರೆ. [ಅನುಪಮಾ ಶೆಣೈ ಅವರಿಗೆ ನೈತಿಕ ಬೆಂಬಲ]

ಬಂದ್ ಹಿನ್ನಲೆಯಲ್ಲಿ ಕೂಡ್ಲಿಗಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದು, ಬಂದ್ಗೆ ಬೆಂಬಲ ನೀಡಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. [ಅನುಪಮಾ ಶೆಣೈ ವರ್ಗಾವಣೆ, ಮೌನ ಮುರಿದ ಸಿದ್ದರಾಮಯ್ಯ]
ಅನುಪಮಾ ಶೆಣೈ ಅವರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೌನ ಮುರಿದಿದ್ದರು. ಕಾರ್ಮಿಕ ಸಚಿವ ಪರಮೇಶ್ವರ ನಾಯಕ್ ಅವರನ್ನು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡಿದ್ದರು. ಅನುಪಮಾ ಶೆಣೈ ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚಿಸಲಾಗಿತ್ತು.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, 'ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ಒಂದು ವರ್ಷದಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಆದ್ದರಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ತಪ್ಪು ಹುಡುಕಲು ಸಾಧ್ಯವೇ?' ಎಂದು ಪ್ರಶ್ನಿಸಿದ್ದರು.
ಅನುಪಮಾ ಶೆಣೈ ಅವರು ಕಾರ್ಮಿಕ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ಅವರ ಕರೆ ಸ್ವೀಕರಿಸದ್ದಕ್ಕೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಈ ಬಗ್ಗೆ ನನಗೇನೂ ತಿಳಿದಿಲ್ಲ' ಎಂದು ಹೇಳಿದ್ದಾರೆ.












Click it and Unblock the Notifications