ಜಿಂದಾಲ್ಗೆ ಸರ್ಕಾರಿ ಭೂಮಿ; ಹೈಕೋರ್ಟ್ನಲ್ಲಿ ಪಿಐಎಲ್ ವಜಾ
ಬಳ್ಳಾರಿ, ನವೆಂಬರ್ 09; ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಕಂಪನಿಗೆ 3,667 ಎಕರೆ ಸರ್ಕಾರಿ ಭೂಮಿ ಪರಭಾರೆ ಮಾಡಿದ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸೋಮವಾರ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ಕೆ. ಎ. ಪೌಲ್ ಎಂಬುವವರು ಸರ್ಕಾರಿ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
2021ರ ಏಪ್ರಿಲ್ 26ರಂದು ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ಗೆ 3,667 ಎಕರೆ ಸರ್ಕಾರಿ ಭೂಮಿ ಪರಭಾರೆ ಮಾಡಲು ಒಪ್ಪಿಗೆ ನೀಡಲಾಗಿತ್ತು. ಇದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು.

ಅರ್ಜಿಯ ವಿಚಾರಣೆ ವೇಳೆ ಸರ್ಕಾರಿ ವಕೀಲರು ಭೂಮಿ ಪರಭಾರೆ ಪ್ರಕರಣ ಮುಖ್ಯಮಂತ್ರಿಗಳ ಮರು ಪರಿಶೀಲನೆಯಲ್ಲಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮುಖ್ಯಮಂತ್ರಿಗಳು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೋರ್ಟ್ಗೆ ಹೇಳಿಕೆ ನೀಡಿದರು.
ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲರು ನಮ್ಮ ಹಿರಿಯ ವಕೀಲರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅರ್ಜಿಯ ಕುರಿತು ವಾದ ಮಂಡಿಸಲು ಕಾಲಾವಕಾಶಬೇಕಿದೆ. ಆದ್ದರಿಂದ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು.
ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಲಿ ನಿರಾಕರಿಸಿತು. ಸರ್ಕಾರಿ ವಕೀಲರ ಹೇಳಿಕೆ ಗಮನಿಸಿದರೆ ಅರ್ಜಿ ವಿಚಾರಣೆ ಮುಂದುವರೆಸುವ ಅಗತ್ಯವಿಲ್ಲ ಎಂದು ಅನ್ನಿಸುತ್ತದೆ ಎಂದು ಅಭಿಪ್ರಾಯಪಟ್ಟಿತು, ಅರ್ಜಿಯನ್ನು ವಜಾಗೊಳಿಸಿತು.
ಯಡಿಯೂರಪ್ಪ ನೇತೃತ್ವದ ಹಿಂದಿನ ಸರ್ಕಾರ ಜಿಂದಾಲ್ಗೆ ಭೂಮಿ ಪರಭಾರೆ ಮಾಡಲು ತೀರ್ಮಾನಿಸಿತ್ತು. ಆದರೆ ಈಗ ಇಡೀ ಪ್ರಕರಣ ಮುಖ್ಯಮಂತ್ರಿಗಳ ಮರು ಪರಿಶೀಲನೆಯಲ್ಲಿದೆ. ಆದ್ದರಿಂದ ಅರ್ಜಿ ವಿಚಾರಣೆ ಮುಂದುವರೆಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿತು.
ಜಿಂದಾಲ್ಗೆ ಸರ್ಕಾರದ 3,667 ಎಕರೆ ಭೂಮಿ ಪರಭಾರೆ ಮಾಡುವ ಸರ್ಕಾರದ ತೀರ್ಮಾನ ರದ್ದುಗೊಳಿಸಬೇಕು. ಜಮೀನು ಪರಭಾರೆ ನಿರ್ಧಾರದ ಕುರಿತು ತನಿಖೆ ನಡೆಸಲು ಸ್ವತಂತ್ರ ಸಂಸ್ಥೆಯೊಂದನ್ನು ನೇಮಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಜೂನ್ ತಿಂಗಳಿನಲ್ಲಿ ಅರ್ಜಿಯ ವಿಚಾರಣೆ ನಡೆಯುವಾಗ ಸರ್ಕಾರಿ ವಕೀಲರು ಜಿಂದಾಲ್ಗೆ ಭೂಮಿ ಮಂಜೂರು ಮಾಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಸಂಪುಟದ ತೀರ್ಮಾನ ಅಂತಿಮಗೊಂಡಿಲ್ಲ ಎಂದು ವಾದ ಮಂಡಿಸಿದ್ದರು.
ಆಗ ಹೈಕೋರ್ಟ್ ಸರ್ಕಾರಿ ಜಮೀನು ಪರಭಾರೆ ಮಾಡುವ ಕುರಿತು ಸಚಿವ ಸಂಪುಟದ ನಿರ್ಣಯದ ಆಧಾರದ ಮೇಲೆ ಸರ್ಕಾರ ಕೈಗೊಳ್ಳುವ ಕ್ರಮ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶ ನೀಡಿತ್ತು.
ಸರ್ಕಾರಿ ಜಮೀನು ಪರಭಾರೆ ಕುರಿತು ಸ್ಪಷ್ಟ ನಿಲುವು ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈಗ ಇಡೀ ಪ್ರಕರಣ ಮುಖ್ಯಮಂತ್ರಿಗಳ ಪುನರ್ ಪರಿಶೀಲನೆಯಲ್ಲಿದೆ ಎಂದು ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅರ್ಜಿ ವಜಾಗೊಂಡಿದೆ.
ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್ಗೆ ಸರ್ಕಾರಿ ಭೂಮಿ ಪರಭಾರೆ ಮಾಡುವ ತೀರ್ಮಾನವನ್ನು ಯಡಿಯೂರಪ್ಪ ವಿರೋಧಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಭೂಮಿ ಪರಭಾರೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು.
ಸರ್ಕಾರಿ ಭೂಮಿಯಲ್ಲಿ ಅತಿ ಕಡಿಮೆ ಬೆಲೆಗೆ ಪರಭಾರೆ ಮಾಡಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪ್ರತಿಪಕ್ಷಗಳು ಸಹ ಸರ್ಕಾರವನ್ನು ಟೀಕಿಸಿದ್ದವು. ಯಡಿಯೂರಪ್ಪ ಭೂಮಿ ಪರಭಾರೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದರು.
ಬಿಜೆಪಿಯಲ್ಲಿಯೂ ಸಹ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಆಗ ಸಚಿವ ಸಂಪುಟ ಸಭೆಯಲ್ಲಿ ಭೂಮಿ ಪರಭಾರೆ ಪ್ರಕ್ರಿಯೆಗೆ ತಡೆ ನೀಡಲು ತೀರ್ಮಾನಿಸಲಾಗಿತ್ತು. ಆಗ ಕರ್ನಾಟಕ ಹೈಕೋರ್ಟ್ನಲ್ಲಿ ಭೂಮಿ ಪರಭಾರೆ ರದ್ದುಗೊಳಿಸಬೇಕು ಎಂದು ಪಿಐಎಲ್ ಸಹ ದಾಖಲಾಗಿತ್ತು.












Click it and Unblock the Notifications