ಡಿಕೆಶಿ ಮುಖ್ಯಮಂತ್ರಿಯಾಗೋ ಭ್ರಮೆಯಲ್ಲಿದ್ದಾರೆ: ಶ್ರೀರಾಮುಲು ವ್ಯಂಗ್ಯ
ಬಳ್ಳಾರಿ, ನವೆಂಬರ್ 2: ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳ ಉಪ ಚುನಾವಣೆ ಗೆದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ, ಪರೋಕ್ಷವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.
ನಾನು ನಿಮಗೇನು ಅನ್ಯಾಯ ಮಾಡಿದ್ದೇ ಮುನಿರತ್ನ ಅಣ್ಣನವರೇ?
ಇದೇ ವೇಳೆ ಮಾತನಾಡಿದ ಸಚಿವ ಶ್ರೀರಾಮುಲು, ರಾಜರಾಜೇಶ್ವರಿ ನಗರವನ್ನು ಡಿ.ಕೆ ಶಿವಕುಮಾರ್, ಶಿರಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿಷ್ಠಿಯಾಗಿ ತೆಗೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಇಬ್ಬರು ನಾಯಕರಿಗೆ ಶುಭವಾಗಲಿ, ಆದರೆ ಗೆಲ್ಲೋದು ಮಾತ್ರ ಬಿಜೆಪಿ ಎಂದರು.
ಸಂಸದ ಡಿ.ಕೆ ಸುರೇಶ್ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿನಗರ ಕ್ಷೇತ್ರ ಸೋತರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಸೂಕ್ತವೇ ಎನ್ನುವ ಅನುಮಾನ ಹುಟ್ಟುತ್ತದೆ. ಹೀಗಾಗಿ ಡಿಕೆಶಿ ಸೋಲಿನ ಹತಾಶೆಯಿಂದ ಏಕವಚನದಲ್ಲಿ ಮಾತನಾಡ್ತಿದ್ದಾರೆ. ಯಾಕೆಂದರೆ ಸೋಲುವ ಭಯ ಅವರನ್ನು ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರ ವ್ಯಾಪ್ತಿಯ ಕ್ಷೇತ್ರ ಸೋತರೆ ರಾಜ್ಯವನ್ನು ಡಿ.ಕೆ ಶಿವಕುಮಾರ್ ಹೇಗೆ ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇನ್ನು ಶಿರಾ ಕ್ಷೇತ್ರದ ಉಸ್ತುವಾರಿಯನ್ನು ಬಿ.ವೈ ವಿಜಯೇಂದ್ರ ತೆಗೆದುಕೊಂಡಿದ್ದಾರೆ. ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಬಿಜೆಪಿಯ ಯುವ ನಾಯಕ ಚುನಾವಣೆಯನ್ನು ಹೇಗೆ ಗೆಲ್ಲಬೇಕು ಎನ್ನುವುದು ವಿಜಯೇಂದ್ರ ಅವರಿಗೆ ಗೊತ್ತು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.