ಬಳ್ಳಾರಿಯಿಂದ ಕಹಳೆ ಮೊಳಗಿಸುವರೇ ಕಾಂಗ್ರೆಸ್ನ ಉಗ್ರಪ್ಪ?
ಬೆಂಗಳೂರು, ಅಕ್ಟೋಬರ್ 13: ಜಿದ್ದಾಜಿದ್ದಿ ಕಣವಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಫೈರ್ ಬ್ರ್ಯಾಂಡ್ ಖ್ಯಾತಿಯ ವಿ.ಎಸ್. ಉಗ್ರಪ್ಪ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಮಾಹಿತಿ ಕಾಂಗ್ರೆಸ್ ಕಚೇರಿಯಿಂದ ಹೊರ ಬಿದ್ದಿದೆ.
ಬಳ್ಳಾರಿ ಜಿಲ್ಲೆಯ ಆರು ಮಂದಿ ಕಾಂಗ್ರೆಸ್ ಶಾಸಕರಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಒಮ್ಮತ ವಾರದ ಹಿನ್ನೆಲೆಯಲ್ಲಿ ಪಾವಗಡ ಮೂಲದ ವಿಧಾನ ಪರಿಷತ್ ಸದಸ್ಯರೂ ಆದ, ನ್ಯಾಯವಾದಿಯೂ ಆಗಿರುವ ಉಗ್ರಪ್ಪ ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬುದೇ ಕಾಂಗ್ರೆಸ್ ಲೆಕ್ಕಾಚಾರ.
ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಜೈಲಿಗೆ ಅಟ್ಟುವಲ್ಲಿ ಉಗ್ರಪ್ಪ ಮಹತ್ವದ ಪಾತ್ರ ವಹಿಸಿದ್ದರು. ಹೀಗಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಉಗ್ರಪ್ಪ ಅವರಿಗೆ ಜನಪ್ರಿಯತೆ ಕೂಡ ಇದ್ದು, ಇದು ಕಾಂಗ್ರೆಸ್ ಗೆಲುವಿಗೆ ನೆರವಾಗಲಿದೆ ಎನ್ನಲಾಗುತ್ತಿದೆ .

ಹೊರಗಿನ ಅಭ್ಯರ್ಥಿಗೆ ಹಾಕುತ್ತಾರಾ ಮಣೆ?
ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಗೊಂದಲ ಮುಂದುವರೆದಿದೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಬಿ. ನಾಗೇಂದ್ರ, ಇ ತುಕಾರಾಂ, ಪಿಟಿ ಪರಮೇಶ್ವರ ನಾಯಕ್ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ ಹೊರಗಿನ ಅಭ್ಯರ್ಥಿಗೆ ಮಣೆ ಹಾಕುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಗಣಿಗಾರಿಕೆ ವಿರುದ್ಧ ಹೋರಾಡಿದ್ದ ಉಗ್ರಪ್ಪ
ಬಳ್ಳಾರಿ ಜನರ ಒಲವು ಯಾರ ಕಡೆ ಇದೆ ಎನ್ನವುದು ಇನ್ನೂ ಅಸ್ಪಷ್ಟವಾಗಿದೆ. ವಿಎಸ್ ಉಗ್ರಪ್ಪ ಅವರು ಬಳ್ಳಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ತೆಡೆದು ಅಲ್ಲಿನ ಜನರಿಗೆ ಸಹಾಯ ಮಾಡಿದ್ದರು. ಇದರಿಂದ ಉಗ್ರಪ್ಪ ಕಡೆ ಜನರು ಒಲವು ತೋರಿಸಬಹುದೇ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಬಳ್ಳಾರಿ ಅಭ್ಯರ್ಥಿ ಆಯ್ಕೆ ವೇಣುಗೋಪಾಲ್ ಜತೆ ಸಭೆ
ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿಯಿಂದ ಕಣಕ್ಕಿಳಿಯಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ರಾಜ್ಯ ಉಸ್ತುವಾಗಿ ಕೆ.ಸಿ. ವೇಣುಗೋಪಾಲ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಕಳೆದ ನಾಲ್ಕೈದು ದಿನಗಳಿಂದ ಬಳ್ಳಾರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹಲವು ಸಭೆಗಳು ನಡೆದಿವೆ. ಆದರೆ ಇದರುವರೆಗೆ ಒಮ್ಮತದ ಅಭ್ಯರ್ಥಿಯನ್ನು ಅಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಶುಕ್ರವಾರ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕೈ ಮುಖಂಡರ ಸಭೆ ನಡೆಸಿದ್ದರು. ಆದರೆ ಈ ಸಭೆಯಲ್ಲೂ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಪರಿಹಾರ ಸಿಕ್ಕಿರಲಿಲ್ಲ.
ಹಾಗಾಗಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಯಿಂದಲೇ ವೇಣುಗೋಪಾಲ್ ಅವರು ಬಳ್ಳಾರಿ ಶಾಸಕರಿಗೆ ಕರೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಾಸಕರು ಡಿಕೆಶಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಮತ್ತು ಸುಂದರೇಶ್ ಸ್ಪರ್ಧಿಸಲು ಒಲವು ತೋರಿರಲಿಲ್ಲ. ಹಾಗಾಗಿ ಶಿವಮೊಗ್ಗವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಶನಿವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications