ಸಂಡೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ: ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿ ಸಾಧ್ಯತೆ
ಗುರುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್.ಆರ್.ಎಸ್. ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ಬಿಜೆಪಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ
ಬಳ್ಳಾರಿ, ಫೆಬ್ರವರಿ 22: ವಿಧಾನಸಭಾ ಚುನಾವಣಾ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು ಕರ್ನಾಟಕದತ್ತ ಮುಖ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ನಾಯಕರು ಒಬ್ಬೊಬ್ಬರಾಗಿಯೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಫೆಬ್ರವರಿ 11ರಂದು ಪುತ್ತೂರಿಗೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್ ಶಾ ಇದೀಗ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಗುರುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್.ಆರ್.ಎಸ್. ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ಬಿಜೆಪಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದು, ಕಾರ್ಯಕ್ರಮದ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ.

ಗುರುವಾರ ನಡೆಯುವ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇತಿಹಾಸದಲ್ಲಿ ಈವರೆಗೆ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಈ ಬಾರಿ ಶತಾಯ ಗತಾಯ ಗೆಲುವು ಸಾಧಿಸಬೇಕೆಂಬ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಅಮಿತ್ ಶಾ ಅವರು ವಿಜಯಕಹಳೆಯನ್ನು ಇಲ್ಲಿಂದಲೇ ಆರಂಭಿಸುವ ಉದ್ದೇಶದಿಂದ ಸಂಡೂರಿಗೆ ಆಗಮಿಸಲಿದ್ದಾರೆ ಎನ್ನುವುದು ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ.
ಈ ಕಾರ್ಯಕ್ರಮದಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯನ್ನು ಒಳಗೊಂಡಂತೆ ಕಲ್ಯಾಣ ಕರ್ನಾಟಕದ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಇದಕ್ಕಾಗಿ ಎಸ್ಆರ್ಎಸ್ ಗ್ರೌಂಡ್ನಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಫೆಬ್ರವರಿ 23ರಂದು ಹುಬ್ಬಳ್ಳಿಯಿಂದ ಹೆಲಿಕಾಫ್ಟರ್ ಮೂಲಕ 1.30 ರ ಸುಮಾರಿಗೆ ಸಂಡೂರಿಗೆ ಬರುವ ಅಮಿತ್ ಶಾ ಮೊದಲು ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಕೋರ್ ಕಮಿಟಿಯ ಮುಖಂಡರ ಸಭೆಯನ್ನು ಶಿವಪುರ ಪ್ಯಾಲೇಸ್ನಲ್ಲಿ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30ರಿಂದ ಬಹಿರಂಗ ಸಭೆ ನಡೆಸಲಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರ ಸಭೆಯ ನಂತರ ಅಮಿತ್ ಶಾ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದು, ವಿಧಾನಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಹಾಗೂ ಚುನಾವಣಾ ಗೆಲುವಿಗೆ ಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ನಾಯಕರಿಗೆ ಸಲಹೆ ನೀಡಲಿದ್ದಾರೆ.

ಇನ್ನು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆಯುವ ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಜನರು ಸೇರುವ ನಿರೀಕ್ಷೆ ಇದ್ದು, ಈ ನಿಟ್ಟಿನಲ್ಲಿ ಬೇಕಾದ ಮೂಲಸೌಕರ್ಯಗಳ ಬಗ್ಗೆ ಸಿದ್ಧತೆ ನಡೆಸಲಾಗುತ್ತಿದೆ.
ಸಂಡೂರಿನ ಎಸ್.ಆರ್.ಎಸ್. ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ಬಿಜೆಪಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಶ್ರೀರಾಮುಲು ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ.












Click it and Unblock the Notifications