ಕಲುಷಿತ ನೀರು ಸೇವಿಸಿ ಮಹಿಳೆ ಸಾವು: 40ಕ್ಕೂ ಹೆಚ್ಚು ಜನರು ಅಸ್ವಸ್ಥ
ವಿಜಯನಗರ, ಜನವರಿ 11: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ರಾಣಿಪೇಟೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ರಾಣಿಪೇಟೆಯ 12ನೇ ಕ್ರಾಸ್ ನಿವಾಸಿ ಲಕ್ಷ್ಮೀದೇವಿ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಲಕ್ಷ್ಮೀದೇವಿ ಅವರ ಮನೆಯ 11 ತಿಂಗಳ ಮಗು ಸೇರಿದಂತೆ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತ ಲಕ್ಷ್ಮೀದೇವಿ ಕಲುಷಿತ ನೀರು ಸೇವಿಸಿ ಮಂಗಳವಾರ ಎಂಟರಿಂದ ಹತ್ತು ಸಲ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಆರೋಗ್ಯ ಕಾರ್ಯಕರ್ತೆಯರು ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದ್ದಾರೆ. ಆದರೆ ಲಕ್ಷ್ಮೀದೇವಿ ಆರ್ಎಂಪಿ ವೈದ್ಯರ ಬಳಿ ಚಿಕಿತ್ಸೆ ಪಡೆದು, ಮನೆಯಲ್ಲೇ ಗ್ಲುಕೋಸ್ ಹಾಕಿಸಿಕೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ನಗರದಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುವ ವೇಳೆ ನೀರು ಕಲುಷಿತಗೊಂಡಿದ್ದು, ಕುಡಿಯುವ ನೀರು ಸೇರಿರುವ ಅನುಮಾನ ವ್ಯಕ್ತವಾಗಿದೆ.
ಶಾಲಾ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿ ದಾರುಣ ಸಾವು
ಬಳ್ಳಾರಿ: ಶಾಲಾ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಅನಂತರಪುರ ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪ್ರಶಾಂತ್ (18) ಎಂದು ಗುರುತಿಸಲಾಗಿದೆ.
ಮೃತ ಪ್ರಶಾಂತ್ ಹಾಗೂ ಆತನ ಸ್ನೇಹಿತ ಪ್ರವೀಣ್ ಮಂಗಳವಾರ ಕಾಲೇಜು ಮುಗಿಸಿಕೊಂಡು ಹನುಮಂತ ನಗರದಲ್ಲಿರುವ ತಮ್ಮ ಮನೆಗಳಿಗೆ ದ್ವಿಚಕ್ರ ವಾಹನದಲ್ಲಿ ಅನಂತರಪುರ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ವೇಗವಾಗಿ ಬಂದ ಶಾಲಾ ಬಸ್ ಡಿಕ್ಕಿಯಾಗಿದೆ.

ಭೀಕರ ರಸ್ತೆ ಅಪಘಾತದಲ್ಲಿ ಪ್ರಶಾಂತ್ ತಲೆಯ ಮೇಲೆ ಬಸ್ನ ಚಕ್ರ ಹರಿದಿದ್ದು, ಪ್ರವೀಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪ್ರವೀಣ್ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಬಳ್ಳಾರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತದಲ್ಲಿ ಪ್ರಶಾಂತ್ ಹಾಗೂ ಪ್ರವೀಣ್ ಇದ್ದ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.












Click it and Unblock the Notifications