ಶುಕ್ರವಾರ ಬಳ್ಳಾರಿಯಲ್ಲಿ ನರೇಂದ್ರ ಮೋದಿ ಮತಬೇಟೆ
ಬಳ್ಳಾರಿ, ಮೇ 04; ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಶುಕ್ರವಾರ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಮೇ 8ರಂದು ಅಂತ್ಯಗೊಳ್ಳಲಿದೆ.
ನರೇಂದ್ರ ಮೋದಿ ಮೇ 5ರ ಶುಕ್ರವಾರ ಬಳ್ಳಾರಿಗೆ ಆಗಮಿಸಲಿದ್ದಾರೆ. ನಗರದ ಕಪ್ಪಗಲ್ ರಸ್ತೆಯ ಸತ್ಯಂ ಕಾಲೇಜು ಮುಂಭಾಗದ ಮೈದಾನದಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ವಾಹನಗಳ ಸಂಚಾರ ಹಾಗೂ ಮಾರ್ಗ ಬದಲಾವಣೆಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕಂಪ್ಲಿ, ಸಿರಗುಪ್ಪ, ಬಳ್ಳಾರಿ ಗ್ರಾಮೀಣ, ಬಳ್ಳಾರಿ ನಗರ, ಸಂಡೂರು ವಿಧಾನಸಭಾ ಕ್ಷೇತ್ರಗಳಿವೆ. ಬಳ್ಳಾರಿ ನಗರ ಕ್ಷೇತ್ರದ ಚುನಾವಣೆ ಈ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯಿಂದ ಸೋಮಶೇಖರ ರೆಡ್ಡಿ ಕಣದಲ್ಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣ ಸೋಮಶೇಖರ ರೆಡ್ಡಿ ಎದುರಾಳಿ.
ಪ್ರಧಾನಿ ನರೇಂದ್ರ ಮೋದಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ. ಸುಮಾರು ಒಂದು ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, 80 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಸಮಾವೇಶದ ಬಳಿಕ ಮೋದಿ ತುಮಕೂರಿಗೆ ತೆರಳಿದ್ದಾರೆ.
ಮೇ 10ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಮೇ 5, 6 ಮತ್ತು 7ರಂದು ನರೇಂದ್ರ ಮೋದಿ ಸತತವಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ 6 ಮತ್ತು 7ರಂದು ಬೆಂಗಳೂರು ನಗರದಲ್ಲಿ ಎರಡು ರೋಡ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಮೇ 8ರಂದು ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲಿದೆ.

ವಾಹನ ಸವಾರರಿಗೆ ಸೂಚನೆ; ಬಿಜೆಪಿ ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಸಂಚಾರದ ಆಡಚಣೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕಪ್ಪಗಲ್ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಅನ್ಯ ಮಾರ್ಗದ ಮೂಲಕ ಸಂಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಸಿರಿವಾರ, ಕಪ್ಪಗಲ್ ಗ್ರಾಮದಿಂದ ಬಳ್ಳಾರಿ ನಗರಕ್ಕೆ ಬರುವ ಮತ್ತು ಹೋಗುವ ಹಾಗೂ ಬಳ್ಳಾರಿ ನಗರದಿಂದ ಸಿರಿವಾರ, ಕಪ್ಪಗಲ್ ಗ್ರಾಮಕ್ಕೆ ಹೋಗುವ ಮತ್ತು ಬರುವ ಸಾರ್ವಜನಿಕರ ಎಲ್ಲಾ ವಾಹನಗಳಿಗೆ ಬಳ್ಳಾರಿ ನಗರದ ಕಪ್ಪಗಲ್ ರಸ್ತೆಯ ಮೂಲಕ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬದಲಿ ಮಾರ್ಗವಾದ ಕೆ. ಇ. ಬಿ ಸರ್ಕಲ್, ಸಂಗನಕಲ್ ಬೈಪಾಸ್, ಸಿರಿವಾರ ಕ್ರಾಸ್ ಮುಖಾಂತರ ಸಂಚರಿಸಲು ಅವಕಾಶವಿದೆ.
ಮ್ಯಾಕ್ಸ್ ಕ್ರಾಸ್ನಿಂದ ಕಪ್ಪಗಲ್ ರಸ್ತೆಯ ಬ್ರಹ್ಮಯ್ಯ ದೇವಸ್ಥಾನದ ಕಾಲುವೆಯವರೆಗೆ ರಸ್ತೆಯ ಎರಡು ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ. ಭದ್ರತಾ ಹಿತದೃಷ್ಟಿಯಿಂದ ಕಾರ್ಯಕ್ರಮ ಪ್ರದೇಶದ ಸುತ್ತಲೂ 5 ಕಿ. ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತಿತರ ಸುಲಭವಾಗಿ ಹಾಗೂ ಕ್ಷಣಾರ್ಧದಲ್ಲಿ ದಹಿಸಬಲ್ಲ ವಸ್ತುಗಳನ್ನು ವಾಹನದಲ್ಲಿ ಸಾಗಣೆ, ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಕಾರ್ಯಕ್ರಮ ನಡೆಯುವ ಪ್ರದೇಶದಲ್ಲಿ ಯಾವುದೇ ರೀತಿಯ ಡ್ರೋನ್ ಹಾರಾಟ ಮಾಡದಂತೆ ರೆಡ್ ಜೋನ್ ಪ್ರದೇಶವನ್ನಾಗಿ ಘೋಷಿಸಿದ್ದು, ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications