ಬಳ್ಳಾರಿ; ಕೊರೊನಾದಿಂದ ಗುಣಮುಖನಾಗಿದ್ದರೂ ಬಿಡಲಿಲ್ಲ ಸಾವು
ಬಳ್ಳಾರಿ, ಜುಲೈ 24: ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಏಳು ದಿನಗಳ ಬಳಿಕ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ಹೆಡ್ ಕಾನ್ ಸ್ಟೆಬಲ್ ಸಾವು ಇದೀಗ ಆರೋಗ್ಯ ಇಲಾಖೆಗೆ ಸವಾಲಾಗಿದೆ. ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ಮುಖ್ಯ ಪೇದೆ ಗೌರಿಹಳ್ಳಿ ರವಿ (44) ಇಂದು ಮುಂಜಾನೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ.
ಬಳ್ಳಾರಿ; ಕೊರೊನಾ ಗೆದ್ದ 93 ವರ್ಷದ ವೃದ್ಧೆ
ರವಿ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಳ್ಳಾರಿಯ ಕೋವಿಡ್ ಸೆಂಟರ್ ನಲ್ಲಿ 14 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಇದೇ ತಿಂಗಳು 17ರಂದು ಗುಣಮುಖರಾದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಇದಾದ ಬಳಿಕ ಹೋಂ ಕ್ವಾರೆಂಟೈನ್ ಆಗಿದ್ದರು. ಅಲ್ಲದೆ ಆಸ್ಪತ್ರೆಯಿಂದ ಬಿಡುಗಡೆ ಆದ ವೇಳೆ ಅವರನ್ನು ಮತ್ತೆ ಪರೀಕ್ಷೆ ಮಾಡಿದಾಗಲೂ ಸೋಂಕು ಇರಲಿಲ್ಲ. ಹೀಗಾಗಿ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.
ಆದರೆ ಆಸ್ಪತ್ರೆಯಿಂದ ಬಿಡುಗಡೆಯಾದ 7 ದಿನಗಳ ಬಳಿಕ ಮತ್ತೆ ರವಿ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಹೇಗೆ ಎನ್ನುವ ಪ್ರಶ್ನೆ ಇದೀಗ ಆರೋಗ್ಯ ಇಲಾಖೆಗೆ ಎದುರಾಗಿದೆ. ಹೀಗಾಗಿ ಆರೋಗ್ಯ ಇಲಾಖೆ, ರವಿ ಅವರ ಮೃತದೇಹದ ಸ್ವಾಬ್ ಸಂಗ್ರಹಿಸಿ ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಲು ಮುಂದಾಗಿದೆ.