ಬಳ್ಳಾರಿ ಚುನಾವಣಾ ಕಣ : ಗಣಿ ನಾಡಲ್ಲಿ ಮತ್ತೆ ಅರಳುವುದೇ ಕಮಲ?
ಬಳ್ಳಾರಿ, ಏಪ್ರಿಲ್ 02 : ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿಯ ವೈ.ದೇವೇಂದ್ರಪ್ಪ, ಕಾಂಗ್ರೆಸ್ನ ವಿ.ಎಸ್.ಉಗ್ರಪ್ಪ ಅವರು ಒಂದೇ ದಿನ ನಾಮಪತ್ರ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ.
ಮಂಗಳವಾರ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ವಿ.ಎಸ್.ಉಗ್ರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರು ನಾಮಪತ್ರವನ್ನು ಸಲ್ಲಿಸಿದರು. ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ನಿಂದ ಡಿ.ಕೆ.ಶಿವಕುಮಾರ್ ಅಭ್ಯರ್ಥಿಗಳ ಪರವಾಗಿ ಹಾಜರಿದ್ದರು.
ಪತಿ ಬಿಜೆಪಿ ಅಭ್ಯರ್ಥಿ, ಪತ್ನಿ ಕಾಂಗ್ರೆಸ್ನಿಂದ ಜಿ.ಪಂಚಾಯಿತಿ ಸದಸ್ಯೆ!
2018ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ವಿ.ಎಸ್.ಉಗ್ರಪ್ಪ ಅವರು 2,43,161 ಮತಗಳ ಅಂತರದಿಂದ ಗೆದ್ದ ಬಳಿಕ ಬಿಜೆಪಿ ಕ್ಷೇತ್ರದಲ್ಲಿ ಉತ್ಸಾಹ ಕಳೆದುಕೊಂಡಿದೆ. 2019ರ ಚುನಾವಣೆಗೆ ತೀವ್ರವಾಗಿ ಹುಡುಕಾಟ ನಡೆಸಿ ವೈ.ದೇವೇಂದ್ರಪ್ಪ ಅವರಿಗೆ ಟಿಕೆಟ್ ನೀಡಿದೆ.
ಬಿಜೆಪಿ ಅಭ್ಯರ್ಥಿಗಳು ಪ್ರಕಟ : ಬಳ್ಳಾರಿಯಲ್ಲಿ ಗೆದ್ದ ಶ್ರೀರಾಮುಲು!
2014ರ ಚುನಾವಣೆಯಲ್ಲಿ ಬಿಜೆಪಿಯ ಬಿ.ಶ್ರೀರಾಮುಲು ಅವರು ಗೆಲುವು ಸಾಧಿಸಿದ್ದರು. ಆದರೆ, ಉಪ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಅವರ ಪ್ರಭಾವ ಕುಗ್ಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಗೆ ಹಿನ್ನಡೆ ಆಗಲಿದೆಯೇ? ಕಾದು ನೋಡಬೇಕು....
ಕ್ಷೇತ್ರವಾರು ಬಲಾಬಲ
ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಬಳ್ಳಾರಿ ನಗರ ಮತ್ತು ಕೂಡ್ಲಿಗಿ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರು ಇದ್ದಾರೆ. ಬಳ್ಳಾರಿ ಗ್ರಾಮೀಣ, ವಿಜಯನಗರ, ಸಂಡೂರು, ಹಡಗಲಿ, ಹಗರಿಬೊಮ್ಮನಹಳ್ಳಿ, ಕಂಪ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ.
ಕುಸಿದ ಬಿಜೆಪಿ ಬಲ
ಗಣಿನಾಡು ಬಳ್ಳಾರಿಯಲ್ಲಿ ಬಿಜೆಪಿಯ ಪ್ರಾಬಲ್ಯ ಕುಸಿದಿದೆ. 2009ರಲ್ಲಿ ಜೆ.ಶಾಂತ, 2014ರ ಚುನಾವಣೆಯಲ್ಲಿ ಬಿ.ಶ್ರೀರಾಮುಲು ಗೆಲುವು ಸಾಧಿಸಿದ್ದರು. ಆದರೆ, 2018ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ವಿ.ಎಸ್.ಉಗ್ರಪ್ಪ ಅವರು ಜೆ.ಶಾಂತ ಅವರ ವಿರುದ್ಧ 2,43,161 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶ್ರೀರಾಮುಲು ನೆಚ್ಚಿಕೊಂಡ ಪಕ್ಷ
ಬಿಜೆಪಿ ಕ್ಷೇತ್ರದಲ್ಲಿ ಗೆಲುವಿಗಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ನೆಚ್ಚಿಕೊಂಡಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ಅಳೆದೂ ತೂಗಿ ಈ ಬಾರಿ ಕಾಂಗ್ರೆಸ್ನಿಂದ ಬಂದ ವೈ.ದೇವೇಂದ್ರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಉಪ ಚುನಾವಣೆ ತಂತ್ರ
2018ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಕ್ಷೇತ್ರದ ಚುನಾವಣೆಯನ್ನು ಎದುರಿಸಿದ್ದವು. ವಿ.ಎಸ್.ಉಗ್ರಪ್ಪ ಅವರು 6,28,365 ಮತಗಳನ್ನು ಪಡೆದಿದ್ದರು. ಜೆ.ಶಾಂತ 3,85,204 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.