ಪ್ರವಾಹ ಭೀತಿ: ಬಳ್ಳಾರಿಯ 66 ಗ್ರಾಮಗಳಲ್ಲಿ ಕಟ್ಟೆಚ್ಚರ
ಬಳ್ಳಾರಿ, ಆಗಸ್ಟ್ 10: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ಸೇರಿದಂತೆ ಜಿಲ್ಲೆಯಲ್ಲಿ ತುಂಗಭದ್ರಾ ನದಿಯಿಂದ ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಣಿ ಜಿಲ್ಲೆಯ ಅಂದಾಜು 66 ಗ್ರಾಮಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ ನಕುಲ್, ಮಲೆನಾಡಿನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತುಂಗ, ಭದ್ರಾ ಮತ್ತು ವೇದಾವತಿ ನದಿಗಳಿಂದ ಅಪಾರ ಪ್ರಮಾಣದ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿದೆ. ಹೀಗಾಗಿ ಜಿಲ್ಲೆಯ ಹಡಗಲಿ, ಹರಪನಹಳ್ಳಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ. ಜಿಲ್ಲೆಯ ಈ ಮೂರು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ" ಎಂದರು.
"ಕಳೆದ ಬಾರಿ ಪ್ರವಾಹದ ಭೀತಿ ಎದುರಾಗಿದ್ದರಿಂದ ಅಂದಾಜು 3 ಸಾವಿರಕ್ಕೂ ಅಧಿಕ ಮಂದಿಯನ್ನು ಈ ಕಾಳಜಿ ಕೇಂದ್ರಗಳಲ್ಲಿ ಇಡಲಾಗಿತ್ತು. ಅಲ್ಲದೇ ಜಾನುವಾರುಗಳ ರಕ್ಷಣೆಗೆಂದು ಕ್ಯಾಟಲ್ ಕೇಂದ್ರಗಳನ್ನೂ ತೆರೆಯಲಾಗಿತ್ತು. ಈ ಬಾರಿಯೂ ಈ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಸಿದ್ಧಪಡಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಸಿರುಗುಪ್ಪ ಹಾಗೂ ಹಡಗಲಿ ಭಾಗದಲ್ಲಿ ಬೋಟ್ಗಳ ವ್ಯವಸ್ಥೆ ಮಾಡಲಾಗಿದೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಲಾಗಿದೆ. ಅಲ್ಲದೇ, ಕೊರೊನಾ ಸೋಂಕಿತರು ಕಂಡುಬಂದರೆ ಕಾಳಜಿ ಕೇಂದ್ರಗಳಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications