ಬಳ್ಳಾರಿಗೆ ಬಂಪರ್ ಕೊಡುಗೆ : 204 ಕೋಟಿ ರೂ. ಪ್ಯಾಕೇಜ್
ಬೆಂಗಳೂರು, ಜ.21 : ಬಳ್ಳಾರಿ ಗ್ರಾಮಾಂತರ ವಿಧಾನಸಭೆ ಚುನಾವಣೆ ಸಮಯದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಘೋಷಿಸಿದ್ದ 204 ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ನ್ನು ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಎಚ್.ಆಂಜನೇಯ ಅವರು, ಫೆಬ್ರವರಿ ಮೊದಲ ವಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ಯಾಕೇಜ್ ಬಿಡುಗಡೆ ಮಾಡುವುದರ ಜೊತೆಗೆ ಫಲಾನುಭವಿಗಳಿಗೆ ಅಂದೇ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 35.50 ಕೋಟಿ ಸಾಲ ಮಂಜೂರಾತಿ, 538 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಸಣ್ಣ ರೈತರಿಗೆ ಕೊಳವೆ ಬಾವಿ ಮಂಜೂರಾತಿ ಪತ್ರ ನೀಡಲಾಗುವುದೆಂದು ಸಚಿವರು ಮಾಹಿತಿ ನೀಡಿದರು. [ಬಳ್ಳಾರಿ ಅಭಿವೃದ್ಧಿಗೆ 850 ಕೋಟಿ ವಿಶೇಷ ಪ್ಯಾಕೇಜ್]

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ 7,708 ಫಲಾನುಭವಿಗಳಿಗೆ 26.87 ಕೋಟಿ ರೂ.ಗಳನ್ನು ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುರಾರ್ಜಿ ವಸತಿ ಶಾಲೆಗಳ ನಿರ್ಮಾಣವನ್ನು 105 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುವುದು ಎಂದು ಎಚ್.ಆಂಜನೇಯ ತಿಳಿಸಿದರು. [ಬಳ್ಳಾರಿ ಕೈವಶ, ರೆಡ್ಡಿಪಾಳಯಕ್ಕೆ ಮುಖಭಂಗ]
ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ 827 ಫಲಾನುಭವಿಗಳಿಗೆ 5.50 ಕೋಟಿ ರೂ. ವೆಚ್ಚದಲ್ಲಿ ಗಂಗಾ ಕಲ್ಯಾಣ ಹಾಗೂ ಇತರೆ ಯೋಜನೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದರು. ಕ್ಷೇತ್ರದಲ್ಲಿ 18 ವಾಲ್ಮೀಕಿ ಭವನ, 22 ಅಂಬೇಡ್ಕರ್ ಭವನ ಹಾಗೂ ಜಗಜೀವನ್ರಾಂ ಭವನಗಳನ್ನು ನಿರ್ಮಿಸಲಾಗುತ್ತದೆ ಎಂದರು. [ರೆಡ್ಡಿಗೆ ಜಾಮೀನು, ಬಳ್ಳಾರಿಯಲ್ಲಿ ಸಂಭ್ರಮ]
ಏನಿದು ಪ್ಯಾಕೇಜ್ : ಆಗಸ್ಟ್ನಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಕೃಷ್ಣ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಸದ್ಯ ಸಮಾಜ ಕಲ್ಯಾಣ ಇಲಾಖೆ ಪ್ಯಾಕೇಜ್ ಮಾತ್ರ ಬಿಡುಗಡೆಯಾಗುತ್ತಿದೆ.












Click it and Unblock the Notifications