Sandur By Election: ಸಂಡೂರು ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ಬಳ್ಳಾರಿ, ನವೆಂಬರ್ 07: ಕರ್ನಾಟಕದ 2 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಪೈಕಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಸೇರಿದೆ. ಸಂಡೂರು ಉಪ ಚುನಾವಣೆ ಕಣ ಅಂತಿಮವಾಗಿದ್ದು, 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶವನ್ನು ಹೊರಡಿಸಿದ್ದಾರೆ. ನವೆಂಬರ್ 11ರ ಸಂಜೆ 6 ಗಂಟೆಯಿಂದ ನವೆಂಬರ್ 14ರ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿವಿಧ ಷರತ್ತುಗಳನ್ನು ವಿಧಿಸಿ ಆದೇಶಿಸಿದ್ದಾರೆ.

ಷರತ್ತುಗಳ ಮಾಹಿತಿ: ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಈ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದು ನಿಷೇಧಿಸಿದೆ. ಮತದಾನ ಮುಕ್ತಾಯವಾಗುವವರೆಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನೆ ಮನೆ ಪ್ರಚಾರ ನಡೆಸಬಹುದು.
ಉಪ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ 5 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಈ ಪ್ರದೇಶದ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ, ಬುಕ್ಸ್ಟಾಲ್, ಸೈಬರ್ ಕೆಫೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಕಲ್ಲು, ಕ್ಷಾರ ಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿಬಂರ್ಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ನಿಷೇಧಿಸಿದೆ.
ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ. ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಕೂಗುವುದು, ವಾದ್ಯ ಬಾರಿಸುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವಂತಿಲ್ಲ.
ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮತ್ತು ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲೀ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವಂತಿಲ್ಲ.
ಈ ಸಮಯದಲ್ಲಿ ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರ, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಮಾಡಿಕೊಳ್ಳಲಿದೆ.
ಷರತ್ತು ಉಲ್ಲಂಘನೆ ಮಾಡಿದರೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ನಿಷೇಧಾಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications