Sandur By Election: ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ
ಬಳ್ಳಾರಿ, ನವೆಂಬರ್ 23: ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ಆರಂಭವಾಗಿದೆ. 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ-ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. 2023ರ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ನ ಇ. ತುಕಾರಾಂ ರಾಜೀನಾಮೆ ಕಾರಣಕ್ಕೆ ಉಪ ಚುನಾವಣೆ ಎದುರಾಗಿದೆ. ಯಾರಿಗೆ ಗೆಲುವು ಎಂಬ ಲೆಕ್ಕಾಚಾರಗಳು ಜೋರಾಗಿವೆ.
ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಇಂದು ಮತ ಎಣಿಕೆ ನಡೆಯುತ್ತಿದೆ.

ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್ 4 ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಚಿತ್ರಣ ಲಭ್ಯವಾಗಲಿದೆ.
6 ಅಭ್ಯರ್ಥಿಗಳು ಕಣದಲ್ಲಿ: ಸಂಡೂರು ಉಪ ಚುನಾವಣೆ ಕಣದಲ್ಲಿ 6 ಅಭ್ಯರ್ಥಿಗಳಿದ್ದಾರೆ. ಇವರಲ್ಲಿ ಕಾಂಗ್ರೆಸ್ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ ಪ್ರಮುಖ ಅಭ್ಯರ್ಥಿಗಳು.
ಉಳಿದಂತೆ ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ಕಣದಲ್ಲಿದ್ದಾರೆ.
ಮತ ಎಣಿಕೆ ಕೇಂದ್ರ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತಎಣಿಕೆ ನಡೆಯುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶವನ್ನು ಹೊರಡಿಸಿದ್ದಾರೆ.
ಉಪ ಚುನಾವಣೆಯ ಮತ ಎಣಿಕೆಯನ್ನು ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.
2023ರ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನ ಇ. ತುಕಾರಾಂ ಗೆಲುವು ಸಾಧಿಸಿದ್ದರು. ಆದರೆ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಇ. ತುಕಾರಾಂ ಪತ್ನಿ ಇ. ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಅಬ್ಬರದ ಪ್ರಚಾರವನ್ನು ನಡೆಸಿದ್ದಾರೆ. ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅವಕಾಶ ನೀಡಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿಗೆ ಪ್ಲಸ್ ಆಗಲಿದೆಯೇ? ಕಾದು ನೋಡಬೇಕಿದೆ.












Click it and Unblock the Notifications