ಸಿದ್ದರಾಮಯ್ಯಗೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ: ಶ್ರೀರಾಮುಲು
ಬಳ್ಳಾರಿ, ನವೆಂಬರ್ 18: ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ, ಸಿದ್ದರಾಮಯ್ಯರಿಗೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುವ ಸ್ಪಷ್ಟತೆ ಇನ್ನೂ ಸಿಕ್ಕ ಆಗಿಲ್ಲ. ಚಾಮುಂಡೇಶ್ವರಿಯಲ್ಲಿ ಸೋತ ನಂತರ ಬಾದಾಮಿಯಲ್ಲಿ ಕಷ್ಟಪಟ್ಟು ಗೆದ್ದಿದ್ದ ಅವರು, ಕೈಹಿಡಿದ ಅದೇ ಜನರಿಗೆ ಕೈಕೊಟ್ಟು ಇದೀಗ ಕೋಲಾರದ ಕಡೆ ಮುಖ ಮಾಡಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀರಾಮುಲು ಅವರು, ಚಾಮುಂಡಿಯಲ್ಲಿ ಸೋಲು ಕಟ್ಟಿಟ್ಟಬುತ್ತಿ ಎಂದು ತಿಳಿದು ಬಾದಾಮಿಗೆ ಬಂದರು. ಅಲ್ಲಿ ಅಲ್ಪ ಮತಗಳಿಂದ ಗೆದ್ದು, ರಾಜಕೀಯ ಮರುಜನ್ಮ ಪಡೆದರು. ಈಗ ಬಾದಾಮಿಯಲ್ಲೂ ಸೋಲುವ ಭಯದಿಂದ ಬೇರೊಂದು ಕ್ಷೇತ್ರದ ಹುಡುಕಾಟದಲ್ಲಿ ತೊಡಗಿದ್ದಾರೆ. ಯಾವ ಕ್ಷೇತ್ರದಲ್ಲಿ ನಿಲ್ಲಬೇಕೆಂಬ ಸ್ಪಷ್ಟತೆ ಅವರಿಗೆ ಇನ್ನೂ ದೊರೆತಿಲ್ಲ ಎಂದು ಕಾಣುತ್ತದೆ ಎಂದರು.
ಎಸ್.ಸಿ, ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ: ಬಿ.ಶ್ರೀರಾಮುಲು
ಕಳೆದ ಬಾರಿಯಂತೇ ಸಿದ್ದರಾಮಯ್ಯ ವಿರುದ್ಧ ಮುಖಾಮುಖಿ ಸ್ಪರ್ಧೆಗೆ ಇಳಿಯುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ನಿರ್ಧಾರಕ್ಕೆ ಬಂದು ಅರ್ಜಿ ಸಲ್ಲಿಸಲಿ , ಬಳಿಕ ನನ್ನ ನಿರ್ಧಾರ ತಿಳಿಸುವೆ ಎಂದರು.
ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧೆ
ಇನ್ನು ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವೆ. ಪಕ್ಷ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುತ್ತೇನೆ. ಸಿದ್ದರಾಮಯ್ಯ ಅವರನ್ನು ದೋಸ್ತ್ ಎಂದು ಕರೆದ ಶ್ರೀರಾಮುಲು ಮುಂದುವರೆದು ಮಾತನಾಡುತ್ತಾ, ರಾಜ್ಯ ನಾಯಕ ಎಲ್ಲಿಯಾದರೂ ಸ್ಪರ್ಧೆ ಮಾಡಬಹುದು ನನ್ನ ದೋಸ್ತ್ ಸಿದ್ದರಾಮಯ್ಯ ಹೇಳಿದ್ದಾರೆ, ಆ ಮಾತಿನಂತೆಯೇ ನಾನು ರಾಜ್ಯ ಮಟ್ಟದ ನಾಯಕ. ಹಾಗಾಗಿ ಎಲ್ಲಿಯಾದರೂ ಸ್ಪರ್ಧೆ ಮಾಡುತ್ತೇನೆ ಎಂದರು.
ಬಿಜೆಪಿ ನುಡಿದಂತೆ ನಡೆದುಕೊಂಡಿದೆ
ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ನ್ಯಾಯದ ವಿಚಾರದಲ್ಲಿ ನುಡಿದಂತೆ ನಡೆದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಕಾಂಗ್ರೆಸ್ಸಿಗರು ಕಪಟ ರಾಜಕಾರಣ ಮಾಡಿದರು. ನಮ್ಮ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಾಮಾಜಿಕ ನ್ಯಾಯ ಕೊಡಲಿಲ್ಲ. ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಕೊಡಗೆ ಸೊನ್ನೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಬಿಜೆಪಿಯ ಶಕ್ತಿಯಾಗಿದ್ದವು, ಈಗಲೂ ಶಕ್ತಿಯಾಗಿಯೇ ಮುಂದುವರಿದಿದ್ದು, ಮುಂದೆಯೂ ಬಿಜೆಪಿಗೆ ಬೆಂಬಲ ಕೊಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ, ರಾಜ್ಯ ನಾಯಕರ ಭಾಗಿ
ನವೆಂಬರ್ 20ರಂದು ಬಿಜೆಪಿ ಎಸ್ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ - ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ ಎಲ್ಲ ಪೂರ್ವತಯಾರಿ ನಡೆದಿದೆ ಎಂದು ಮಾಹಿತಿ ನೀಡಿದರು.
10 ಲಕ್ಷಕ್ಕೂ ಹೆಚ್ಚು ಜನರು ಭಾಗಿ
ಬೀದರ್ ನಿಂದ ಚಾಮರಾಜನಗರದ ವರೆಗೆ ಪಕ್ಷದ ಈ ಸಮುದಾಯಗಳ ಕಾರ್ಯಕರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಿರಿಯ ನಾಯಕರೂ ಭಾಗವಹಿಸುತ್ತಾರೆ, ಆರೋಗ್ಯ ವ್ಯವಸ್ಥೆ ನೋಡಿಕೊಳ್ಳಲು ಆಂಬುಲೆನ್ಸ್, ಆರೋಗ್ಯ ಕೇಂದ್ರವೂ ಇರಲಿದೆ ಎಂದರು.
ಎಸ್ಟಿ ಸಮಾವೇಶದ ಯಶಸ್ವಿಗೆ 41 ಸಮಿತಿ ರಚಿಸಿದ್ದು, 5 ಸಾವಿರ ಕಾರ್ಯಕರ್ತರನ್ನು ನಿಯೋಗಿಸಿದ್ದೇವೆ. ಸಮಾವೇಶ ನಡೆಯುವ ಸ್ಥಳದಲ್ಲಿ 200ಕ್ಕೂ ಅಧಿಕ ಶೌಚಾಲಯಗಳಿರುತ್ತವೆ. 28 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. 8 ಸಾವಿರದಿಂದ 10 ಸಾವಿರ ಬಸ್ಗಳು ಬರಲಿವೆ. 25 ಸಾವಿರ ಕ್ರೂಸರ್ ವಾಹನಗಳು, 10 ಸಾವಿರ ಕಾರುಗಳು, 25 ಸಾವಿರ ಬೈಕ್ಗಳು ಬರಲಿವೆ. 2 ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಲಾಗಿದೆ. 1 ಲಕ್ಷ ಚದರ ಅಡಿಯಲ್ಲಿ ಅಡುಗೆ ಸಿದ್ಧಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಊಟದ ವ್ಯವಸ್ಥೆ ಮಾಡಲಿದ್ದೇವೆ. 300ಕ್ಕೂ ಹೆಚ್ಚು ಊಟದ ಕೌಂಟರ್ ಇರಲಿವೆ. 3 ಸಾವಿರ ಕಾರ್ಯಕರ್ತರು ಊಟದ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದು ಸಮಾವೇಶದ ಬಗ್ಗೆ ಶ್ರೀರಾಮುಲು ಮಾಹಿತಿ ನೀಡಿದರು.