ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ, ನಮ್ಮೊಂದಿಗೂ ಚರ್ಚಿಸಿ ಎಂದ ಸೋಮಶೇಖರ್ ರೆಡ್ಡಿ
ಬಳ್ಳಾರಿ, ಸೆಪ್ಟೆಂಬರ್ 28: ಸರ್ಕಾರದ ನಿರ್ಧಾರದ ವಿರುದ್ಧ ಮತ್ತೊಮ್ಮೆ ಶಾಸಕ ಸೋಮಶೇಖರ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಕ್ಕೆ, ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನ ಕರೆದು ಸಿಎಂ ಬಿಎಸ್ ವೈ ಚರ್ಚೆ ನಡೆಸಬೇಕು" ಎಂದು ಹೇಳಿದ್ದಾರೆ.
"ಈ ಕುರಿತು ಈಗಾಗಲೇ ಸಿಎಂ ಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ. ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು" ಎಂದು ತಿಳಿಸಿದರು.

ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದರು. ಈ ಸಂದರ್ಭ, ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.












Click it and Unblock the Notifications