ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧ
ಬಳ್ಳಾರಿ, ಮಾ.3 : ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಬಿಜೆಪಿಗೆ ಮರಳುವ ಪ್ರಕ್ರಿಯೆಗಳಿಗೆ ಚಾಲನೆ ದೊರೆತಿದೆ. ಬಿಜೆಪಿಗೆ ಮರಳುವಂತೆ ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಂದ ಆಹ್ವಾನ ಬಂದಿದೆ ಈ ಕುರಿತು 2-3 ದಿನದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಭಾನುವಾರ ಮಾತನಾಡಿದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶ್ರೀರಾಮುಲು, ಬಿಜೆಪಿಗೆ ಮರಳುವಂತೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಂದ ಆಹ್ವಾನ ಬಂದಿದೆ ಎಂದು ಹೇಳಿದರು. ಆಹ್ವಾನದ ಕುರಿತು ಜನಾರ್ದನ ರೆಡ್ಡಿ ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಹಿಂದಿನ ಎಲ್ಲಾ ಘಟನೆಗಳನ್ನು ಮರೆತು ದೇಶದ ಒಳಿತಿಗಾಗಿ ಪಕ್ಷಕ್ಕೆ ಬರುವಂತೆ ಬಿಜೆಪಿ ನಾಯಕರು ಆಹ್ವಾನ ನೀಡಿದ್ದಾರೆ. ನನ್ನೊಂದಿಗೆ ಇರುವ ನಾಯಕರು, ಕಾರ್ಯಕರ್ತರ ಅಭಿಪ್ರಾಯಪಡೆದು ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಕುರಿತು ಅಂತಿಮ ನಿರ್ಧಾರವನ್ನು 2-3ದಿನಗಳಲ್ಲಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. [ಶ್ರೀರಾಮುಲು ಬಿಜೆಪಿಗೆ ಮರಳುವುದು ಎಲ್ಲಿಗೆ ಬಂತು]
ಶ್ರೀರಾಮುಲು ಬಿಜೆಪಿಗೆ ಸೇರ್ಪಡೆಗೊಳ್ಳಲು ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಸುಷ್ಮಾ ಸ್ವರಾಜ್ ಅವರನ್ನು ಒಪ್ಪಿಸುತ್ತೇನೆ ಎಂದು ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಶ್ರೀರಾಮುಲು ಅವರಿಗೆ ಆಹ್ವಾನ ನೀಡಿದ್ದಾರೆ. [ಬಿಎಸ್ವೈ ನಂತರ ಬಿಜೆಪಿ ಕಣ್ಣು ಶ್ರೀರಾಮುಲುವತ್ತ]
ಬಿಜೆಪಿ ಶಕ್ತಿ ಹೆಚ್ಚಲಿದೆ : ಬಿ.ಶ್ರೀರಾಮುಲು ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಯೊಂದಿಗೆ ವಿಲೀನಗೊಳಿಸಿದರೆ ಬಿಜೆಪಿ ಬಲ ಹೆಚ್ಚಾಗಲಿದೆ. ಈಗಾಗಲೇ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದು, ಇದರಿಂದ ವಿಧಾನಸಭೆಯಲ್ಲಿ ಬಿಜೆಪಿ ಬಲ ಹೆಚ್ಚಾಗಿ, ಪ್ರತಿಪಕ್ಷ ಸ್ಥಾನ ಲಭಿಸಿದೆ. ಬಿಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿ ನಾಲ್ವರು ಶಾಸಕರಿದ್ದು, ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಂಡರೆ ಬಿಜೆಪಿ ಬಲ ಮತ್ತಷ್ಟು ಹೆಚ್ಚಲಿದೆ.
ಯಾರಿಗೆ ಟಿಕೆಟ್ : ಬಿಎಸ್ಆರ್ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಂಡರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಲಾಗುತ್ತದೆ? ಎಂಬುದು ಕುತೂಹಲ ಮೂಡಿಸಿದೆ. ಬಳ್ಳಾರಿ ಜಿಲ್ಲೆಯ ಬಿಜೆಪಿ ಸಂಸದೆ ಜೆ.ಶಾಂತಾ ಈಗಾಗಲೇ ಬಿಎಸ್ಆರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಅವರಿಗೆ ಟಕೆಟ್ ನೀಡುತ್ತಾರೆಯೋ? ಅಥವ ಸ್ವತಃ ಶ್ರೀರಾಮುಲು ಚುನಾವಣೆ ಕಣಕ್ಕೆ ಇಳಿಯುತ್ತಾರೆಯೇ ಎಂದು ಕಾದು ನೋಡಬೇಕು.