ರಾಹುಲ್ ಗಾಂಧಿ ಸಮಾವೇಶಕ್ಕೆ ಬಳ್ಳಾರಿ ಸಿದ್ಧ
ಬಳ್ಳಾರಿ, ಏ. 4 : ಗಡಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಬಿರುಸಿನಿಂದ ಸಾಗಿದೆ. ಶುಕ್ರವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಗರದಲ್ಲಿ ಪ್ರಚಾರ ನಡೆಸಲಿದ್ದು, ಸಮಾವೇಶಕ್ಕೆ ವೇದಿಕೆ ಸಿದ್ಧಗೊಂಡಿದೆ. ಇದರ ನಡುವೆಯೇ ಕಾಂಗ್ರೆಸ್ ನಾಯಕರ ಭಿನ್ನಮತ ಸ್ಫೋಟಗೊಂಡಿದೆ.
ಗುರುವಾರ ರಾಹುಲ್ ಗಾಂಧಿ ಸಮಾವೇಶದ ಕುರಿತು ಮಾಹಿತಿ ನೀಡಲು, ಶಾಸಕ ಅನಿಲ್ ಲಾಡ್ ಮತ್ತು ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಪತ್ಯೇಕ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಬಳ್ಳಾರಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ಸಾರಿದ್ದಾರೆ. ಅನಿಲ್ ಲಾಡ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಆಂಜಿನೇಯಲು ಒಂದಾಗಿದ್ದರೆ, ಕೆಸಿ ಕೊಂಡಯ್ಯ ಏಕಾಂಗಿಯಾಗಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಗೆ ಆಗಮಿಸಲಿದ್ದು, ಜಿಲ್ಲಾ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ಏರ್ಪಡಿಸಿ ಮಾತನಾಡಲಿದ್ದಾರೆ. ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಲು ಕೆ.ಸಿ. ಕೊಂಡಯ್ಯ ಖಾಸಗಿ ಹೋಟೆಲ್ ನಲ್ಲಿ ಗುರುವಾರ ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿದರು. ಮಧ್ಯಾಹ್ನ ಲಾಡ್ ಸಮಾವೇಶ ನಡೆಯುವ ಸ್ಥಳದಲ್ಲಿ ಮತ್ತೊಮ್ಮೆ ಇದೇ ಮಾಹಿತಿಯನ್ನು ಮಾಧ್ಯಮಗಳಿಗೆ ಹೇಳಿದರು.

ಎರಡು ಪತ್ರಿಕಾಗೋಷ್ಠಿ
ರಾಹುಲ್ ಗಾಂಧಿ ಪ್ರಚಾರ ಸಭೆ ಬಗ್ಗೆ ತಿಳಿಸಲು ಎರಡು ಪತ್ರಿಕಾಗೋಷ್ಠಿ ನಡೆದವು. ಸಮಾವೇಶದ ಉಸ್ತುವಾರಿ ವಹಿಸಿರುವ ಎಚ್.ಎಂ. ರೇವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೋಸರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಎರಡು ಪತ್ರಿಕಾಗೋಷ್ಠಿಗಳಲ್ಲಿ ಪಾಲ್ಗೊಂಡಿದ್ದರು. ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಜಿಲ್ಲಾ ಕಾಂಗ್ರೆಸ್ನಲ್ಲಿ ಒಗ್ಗಟ್ಟಿದೆ. ಎಲ್ಲರೂ ಭಿನ್ನಾಭಿಪ್ರಾಯ ಮರೆತು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದರು.

ರಾಹುಲ್ ಗಾಗಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ
ಶಾಸಕ ಅನಿಲ್ ಲಾಡ್ ರಾಹುಲ್ ಗಾಂಧಿ ಭೇಟಿಯ ಹಿನ್ನಲೆಯಲ್ಲಿ ಕಾಂಗ್ರೆಸ್ಸಿಗರು ಏಕಾಏಕಿ ಎಚ್ಚೆತ್ತುಕೊಂಡು ಸುದ್ದಿಯಾಗುತ್ತಿದ್ದಾರೆ. ಸುದ್ದಿಗಾಗಿ ಪ್ರಚಾರಕ್ಕೆ ಬರುವವರಿಂದ ಪಕ್ಷಕ್ಕೆ ಉಪಯೋಗವಿಲ್ಲ. ದಶಕಗಳ ಕಾಲ ಪಕ್ಷದಲ್ಲಿರುವ ನಾಯಕರಿಂದ ಪಕ್ಷ ಹಾಳಾಗಿದೆ ಎಂದು ಕೆಸಿ ಕೊಂಡಯ್ಯ ಅವರನ್ನು ಟೀಕಿಸಿದರು.

1 ಲಕ್ಷ ಜನೆ ಸೇರುವ ಸಾಧ್ಯತೆ
ಬಳ್ಳಾರಿಯಲ್ಲಿ ಇಂದು ನಡೆಯುವ ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಎಸ್. ಆಂಜಿನೇಯಲು ಹೇಳಿದ್ದಾರೆ. ಸಮಾವೇಶಕ್ಕೆ ಆಗಮಿಸುವ ಜನರಿಗಾಗಿ ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಅಗತ್ಯ ಭದ್ರತೆ
ರಾಹುಲ್ ಗಾಂಧಿ ಸಮಾವೇಶಕ್ಕಾಗಿ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್, ಎಸ್ ಪಿಜಿ ತಂಡಗಳು ನಗರಕ್ಕೆ ಆಗಮಿಸಿವೆ. 200 ಜನ ಹೋಂ ಗಾರ್ಡ್, 600 ಜನ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಹನುಮಂತಪ್ಪ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ.












Click it and Unblock the Notifications