ಬಳ್ಳಾರಿ: ಸಂಚಾರಿ ನಿಯಮ ಉಲ್ಲಂಘನೆ ಮೇಲೆ ಕಣ್ಣಿಡಲು ಆಧುನಿಕ ತಂತ್ರಜ್ಞಾನ ಬಳಕೆ
ಬಳ್ಳಾರಿ, ಜೂನ್ 26: ಬಳ್ಳಾರಿ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯ ತನಕ ಸುಮಾರು 300 ರಸ್ತೆ ಅಪಘಾತಗಳು ಸಂಭವಿಸಿದ್ದು, 118 ಜನ ಮೃತಪಟ್ಟಿದ್ದಾರೆ. 436 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಆದ್ದರಿಂದ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದರು.
"ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ನಿಯಂತ್ರಣ ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಜರುಗಿಸಲು ಆಧುನಿಕ ತಂತ್ರಜ್ಞಾನ ಸಾಧನಗಳನ್ನು ಬಳಸಿ ನಿಗಾವಹಿಸಲಾಗುತ್ತಿದೆ" ಎಂದರು.

"ಜಿಲ್ಲೆಯಲ್ಲಿ ರಸ್ತೆ ಅಪಘಾತ ನಿಯಂತ್ರಿಸಲು, ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಆಧುನಿಕ ಉಪಕರಣ ಬಳಕೆ ಮಾಡಲಾಗುವುದು. ಸ್ಪೀಡ್ ಲೇಸರ್ ಗನ್ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಬ್ರೀಥ್ ಅಲ್ಕೋಹಾಲ್ ಅನಲೈಜರ್ ಸಾಧನಗಳು ಸಿಟಿಆರ್ಎಸ್ ಕಚೇರಿಯಿಂದ ಸರಬರಾಜು ಆಗಿದ್ದು, ಇವುಗಳ ಬಗ್ಗೆ ಈಗಾಗಲೇ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ" ಎಂದು ಹೇಳಿದರು.
ಹೇಗೆ ಕೆಲಸ ಮಾಡಲಿದೆ ಸ್ಪೀಡ್ ಲೇಸರ್ ಗನ್: ಸ್ಪೀಡ್ ಲೇಸರ್ ಗನ್ ಉಪಕರಣವು ಸಂಪೂರ್ಣ ಡಿಜಿಟಲ್ ಆಗಿದ್ದು, ಇದರಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಸಂಚಾರಿ ನಿಯಮ ಉಲ್ಲಂಘನೆಯಾದಲ್ಲಿ ಅಂದಿನ ದಿನಾಂಕ, ಪ್ರಿಂಟ್ ದಿನಾಂಕ, ಸೌಂಡ್ ಡೆಸಿಬಲ್ ಮಾಹಿತಿ, ಸ್ಥಳ ಹಾಗೂ ವಾಹನದ ನೋಂದಣಿ ಸಂಖ್ಯೆ ಸೇರಿದಂತೆ ವಿವರಗಳನ್ನು ಇದು ಸ್ವಯಂಚಾಲಿತವಾಗಿ ರೆಕಾರ್ಡ್ ಮಾಡಿಕೊಳ್ಳುತ್ತದೆ.
ಈ ಉಪಕರಣವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯಬಹುದಾದ ಸಾಧನವಾಗಿದ್ದು, ಅಪಾಯಕಾರಿ ಚಾಲನೆ, ಅತಿ ವೇಗ, ಚಾಲನೆ ಮಾಡುವಾಗ ಮೊಬೈಲ್ ಬಳಕೆ, ವೀಲಿಂಗ್ ಮತ್ತು ರೇಸಿಂಗ್, ಹೆಲ್ಮೆಟ್ ಧರಿಸದೇ ವಾಹನ ಚಾಲನೆ, ದ್ವಿ-ಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಸವಾರರ ಚಾಲನೆ, ಸಿಗ್ನಲ್ ಜಂಪಿಗ್ ಮತ್ತು ಮಾದಕ ದ್ರವ್ಯದ ಅಮಲಿನಲ್ಲಿ ವಾಹನ ಚಾಲನೆ ಸೇರಿದಂತೆ ಇನ್ನು ಮುಂತಾದ ಸಂಚಾರ ನಿಯಮ ಉಲ್ಲಂಘನೆ ಗುರುತಿಸಿ ಪ್ರಕರಣ ದಾಖಲಿಸಬಹುದಾಗಿದೆ.
ವಾಹನ ಸವಾರರು ಅನಾವಶ್ಯಕವಾಗಿ ಪೊಲೀಸರೊಂದಿಗೆ ವಾಗ್ವಾದ ಮಾಡುವುದನ್ನು ತಪ್ಪಿಸಲು ಹಾಗೂ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಾಕ್ಷ್ಯಧಾರಗಳನ್ನು ಸಂಗ್ರಹಿಸುತ್ತದೆ. ಪೊಲೀಸ್ ಇಲಾಖೆಯು ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ತಪ್ಪದೇ ಧರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಬ್ರೀಥ್ ಅಲ್ಕೋಹಾಲ್ ಅನಲೈಜರ್ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಪ್ರಕರಣ ದಾಖಲಿಸಲು ಬ್ರೀಥ್ ಅಲ್ಕೋಹಾಲ್ ಅನಲೈಜರ್ ಡಿಜಿಟಲ್ ಉಪಕರಣವನ್ನು ಬಳಸಲಾಗುತ್ತಿದ್ದು, ಮದ್ಯ ಸೇವನೆ ಮಾಡಿದ ವ್ಯಕ್ತಿಯ ಭಾವಚಿತ್ರದ ಸಮೇತ ಮಾಹಿತಿ ದಾಖಲಾಗುತ್ತದೆ. ಈ ಉಪಕರಣದಲ್ಲಿ ಊದಿಸುವುದರ ಮೂಲಕ, ವಾಸನೆ ಮೂಲಕ ಮತ್ತು ನಿರಾಕರಿಸಿದಾಗ ಈ ಮೂರು ರೀತಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಸಾರ್ವಜನಿಕರು ಯಾವುದೇ ದೌರ್ಜನ್ಯ, ಗಲಾಟೆ, ಹಲ್ಲೆ, ದೊಂಬಿ, ಕಳ್ಳತನ, ರಸ್ತೆ ಅಪಘಾತ ಹಾಗೂ ಇತರೆ ತುರ್ತು ಸೇವೆಗಳಿಗೆ 112 ಸಂಖ್ಯೆಗೆ ಕರೆ ಮಾಡಿದರೆ ಪೊಲೀಸ್ ಸೇವೆ ಪಡೆಯಬಹುದಾಗಿದೆ. 24*7 ತುರ್ತು ಪ್ರತಿಕ್ರಿಯೆ ಸೇವೆ ಲಭ್ಯವಿದ್ದು, ದೂರುದಾರರು ಕರೆ ಮಾಡಿದ 15 ನಿಮಿಷಗಳೊಳಗಾಗಿ ಘಟನಾ ಸ್ಥಳಕ್ಕೆ ಆಗಮಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ. ಇದರಿಂದ ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಬರುವ ಅವಶ್ಯಕತೆ ಇರುವುದಿಲ್ಲ.












Click it and Unblock the Notifications