Tungabhadra Dam: ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಪ್ರವಾಹ ಎದುರಿಸಲು ಮುಂಜಾಗ್ರತಾ ಕ್ರಮಗಳೇನು?
ಬಳ್ಳಾರಿ, ಜುಲೈ. 24: ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ. ಹೀಗಾಗಿ, ಮುಂದಾಗಬಹುದಾದ ಸಂಭವನೀಯ ಪ್ರವಾಹ, ಬೆಳೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲಾಗಿದೆ.
ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಭವನೀಯ ಪ್ರವಾಹ ಎದುರಿಸಲು ಎಲ್ಲಾ ತಾಲ್ಲೂಕು ತಹಶೀಲ್ದಾರರು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಳೆಯಿಂದಾಗಿ ಹಾನಿ ಅಥವಾ ಪ್ರವಾಹ ಉಂಟಾದರೆ, ಹಾನಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡು ಸಮರ್ಥವಾಗಿ ನಿರ್ವಹಿಸಬೇಕು ಎಂದಿದ್ದಾರೆ.

ಯಾವುದೇ ಕ್ಷಣದಲ್ಲಾದರೂ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ಗ್ರಾಮಗಳಿಗೆ ಡಂಗೂರ ಮೂಲಕ ಹೆಚ್ಚಿನ ಮುಂಜಾಗ್ರತೆ ನೀಡಬೇಕು. ಬಳ್ಳಾರಿ, ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳು ಹಗರಿ ಮತ್ತು ವೇದಾವತಿ ನದಿಗಳಿಗೆ ಹೊಂದಿಕೊಂಡಿದ್ದು, ಅಪಾಯ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ನೀಡಬೇಕು. ಅಲ್ಲಿನ ಮಕ್ಕಳು, ವಯಸ್ಕರು, ಜಾನುವಾರುಗಳನ್ನು ಆಯಾ ಗ್ರಾಮಾಡಳಿತಾಧಿಕಾರಿಗಳ ಸಹಯೋಗದೊಂದಿಗೆ ಗಣತಿ ಮಾಡಿಕೊಂಡು ಇಟ್ಟುಕೊಂಡಿರಬೇಕು ಎಂದು ತಹಶೀಲ್ದಾರರುಗಳಿಗೆ ನಿರ್ದೇಶನ ನೀಡಿದ್ದಾರೆ.
ಒಂದು ವಾರದೊಳಗಾಗಿ ಪ್ರವಾಹ ಹಾನಿಯಾಗುವಂತಹ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಕಾಳಜಿ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸುವುದು, ಇತರೆ ಪೂರಕ ದಾಸ್ತಾನು ಸಜ್ಜುಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ಜನ ಜನವಾರುಗಳಿಗೆ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಜಿಲ್ಲೆಯ ಅಂತರರಾಜ್ಯ ಗಡಿ ವ್ಯಾಪ್ತಿಯಲ್ಲಿ ಬರುವ ಹಗರಿ (ವೇದಾವತಿ), ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆ ಹಾಗೂ ಕಂಪ್ಲಿ ಸೇತುವೆಗಳ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಮಾನ್ಸೂನ್ ಪ್ರಾರಂಭವಾಗಿರುವುದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸಾಂಕ್ರಾಮಿಕ ರೋಗಗಳು ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಡೆಂಗ್ಯೂ ಹರಡುತ್ತಿದೆ. ಹೀಗಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ವಿಪತ್ತು ನಿರ್ವಹಣೆಗೆ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲ ಕಲ್ಪಿಸುವ ಹಾಗೂ ಸಹಕಾರಿಯಾಗುವ ನಿಟ್ಟಿನಲ್ಲಿ ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತವು ಈಗಾಗಲೇ ಬೋಟ್ ಸೇರಿದಂತೆ ಅಗತ್ಯ ಸಲಕರಣೆ (ಲೈಫ್ ಜಾಕೇಟ್) ಗಳನ್ನು ಇರಿಸಿದೆ. ರಕ್ಷಣಾ ಸಾಮಗ್ರಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿಪತ್ತು ನಿರ್ವಹಣೆ ಮಾಡುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೂ ಸೂಚಿಸಿದ್ದಾರೆ.












Click it and Unblock the Notifications