Tungabhadra Dam: ಹೊಸಪೇಟೆಯಲ್ಲೇ ತಯಾರಾಗುತ್ತಿದೆ ಡ್ಯಾಂ ಹೊಸ ಕ್ರಸ್ಟ್ ಗೇಟ್
ವಿಜಯನಗರ, ಆಗಸ್ಟ್ 12: ಮುನಿರಾಬಾದ್ನಲ್ಲಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಚೈನ್ ಲಿಂಕ್ ಮುರಿದು ಹೋಗಿದೆ. ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮೂಡಿಸಿದೆ. ಹೊಸ ಕ್ರಸ್ಟ್ಗೇಟ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 4 ದಿನದಲ್ಲಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸುವ ಯೋಜನೆ ರೂಪಿಸಲಾಗಿದೆ. ಡ್ಯಾಂನಿಂದ ಇದುವರೆಗೂ 3 ಟಿಸಿಎಂಸಿ ಅಡಿ ನೀರು ನದಿಗೆ ಸೇರಿದೆ ಎಂದು ಅಂದಾಜಿಸಲಾಗಿದೆ.
ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ಗೇಟ್ ಚೈನ್ ಲಿಂಕ್ ಮುರಿದ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಧ್ಯಾಹ್ನ 12.30ಕ್ಕೆ ಡ್ಯಾಂಗೆ ಭೇಟಿ ನೀಡಲಿದ್ದಾರೆ. ಭಾನುವಾರ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಡ್ಯಾಂಗೆ ಭೇಟಿ ನೀಡಿ, ಪರಿಶೀಲಿಸಿ, ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಇಲಾಖೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಹೊಸಪೇಟೆಯಲ್ಲೇ ಹೊಸ ಗೇಟ್ ತಯಾರಿ: ಡ್ಯಾಂನ ಹೊಸ ಕ್ರಸ್ಟ್ಗೇಟ್ ನಿರ್ಮಾಣ ಕಾರ್ಯ ಈಗಾಗಲೇ ನಡೆಯುತ್ತಿದೆ. ಈ ಕುರಿತು ಡಿ. ಕೆ. ಶಿವಕುಮಾರ್ ಫೋಟೋ ಹಂಚಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿಯೇ ಹೊಸ ಗೇಟ್ ತಯಾರಾಗುತ್ತಿದೆ. ತಜ್ಞರು, ಅಧಿಕಾರಿಗಳ ತಂಡ ಉಸ್ತುವಾರಿ ನೋಡಿಕೊಳ್ಳುತ್ತಿದೆ.
ಹೊಸಪೇಟೆಯ ನಾರಾಯಣ ಇಂಜಿನಿಯರ್ಸ್ನಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನಿರ್ಮಾಣ ನಡೆಯುತ್ತಿದೆ. ಡಿ. ಕೆ. ಶಿವಕುಮಾರ್ ಸಹ ಸ್ಥಳಕ್ಕೆ ಭೇಟಿ ನೀಡಿ ತಯಾರಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ನಿರ್ಮಾಣ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು, ಸದ್ಯದಲ್ಲೇ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ.
ಕಳೆದ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಗಿದೆ. ರೈತರ ಬೆಳೆ ಉಳಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ. ಬೇರೆ ಜಲಾಶಯಗಳಲ್ಲಿ ಕ್ರಸ್ಟ್ ಗೇಟ್ಗೆ 2 ರೀತಿಯ ಸುರಕ್ಷತೆಗೆ ಇರುತ್ತದೆ. ತುಂಗಭದ್ರಾದಲ್ಲಿ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ನಿಯೋಗ ಭೇಟಿ: ಸೋಮವಾರ ತುಂಗಭದ್ರಾ ಡ್ಯಾಂಗೆ ಕರ್ನಾಟಕ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷ ನಾಯಕ ಆರ್. ಅಶೋಕ, ಮಾಜಿ ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವಾರು ನಾಯಕರು ನಿಯೋಗದಲ್ಲಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ವಿಜಯನಗರ ಜಿಲ್ಲೆಯ ತುಂಗಭದ್ರಾ ಡ್ಯಾಂನ ಕ್ರಸ್ಟ್ಗೇಟ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಾಯಿತು ಎಂದು ವಿಜಯೇಂದ್ರ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.
ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳ ಜನಸಾಮಾನ್ಯರು ಪ್ರವಾಹ ಎದುರಾಗುವ ಆತಂಕ ವ್ಯಕ್ತಪಡಿಸಿದ್ದು, ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ ಆಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆ ಎದುರಾಗುವ ಆತಂಕದಲ್ಲಿದ್ದಾರೆ.
ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.












Click it and Unblock the Notifications