ವಿಜಯನಗರ: ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ
ವಿಜಯನಗರ, ಮಾರ್ಚ್ 30: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಬಳಿಗನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ರೈತ ನಾರನಗೌಡ(48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಕುಟುಂಬಕ್ಕೆ ಆಧಾರವಾಗಿದ್ದ ಎರಡು ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಮತ್ತು ಟೊಮೆಟೊ ಬೆಳೆಯನ್ನು ತುಂಬಾ ಕಷ್ಟಪಟ್ಟು ಬೆಳೆದಿದ್ದ ರೈತ ನಾರನಗೌಡ, ನಿಗದಿತ ವೈಜ್ಞಾನಿಕ ಬೆಲೆ ಸಿಗದೆ ತುಂಬಾ ನಷ್ಟ ಅನುಭವಿಸಿದ್ದರು.

ಇದಕ್ಕಾಗಿ ಕೊಟ್ಟೂರಿನ ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಒಂದು ಲಕ್ಷ ರೂಪಾಯಿ ಸಾಲ ಮಾಡಿದ್ದು, ಹಾಗೂ ಕೈಗಡವಾಗಿ ಅವರಿವರ ಬಳಿ ರೂಪಾಯಿ 2 ಲಕ್ಷ ಸಾಲ ಪಡೆದಿದ್ದರು.

ಬ್ಯಾಂಕ್ ಮತ್ತು ಕೈಗಡ ಸಾಲ ತೀರಿಸಲು ಆಗುವುದಿಲ್ಲ ಎಂದು ನಾರನಗೌಡ ಅವರು, ಜಮೀನಿಗೆ ತೆರಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಚಿಗಟೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications