ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಸ್ತು ಎಂದ ಸಚಿವ ಸಂಪುಟ
ಬೆಂಗಳೂರು, ನ .18: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೆ ಈಡೇರುವ ಕಾಲ ಬಂದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಬಗ್ಗೆ ಅನೌಪಚಾರಿಕ ಒಮ್ಮತ ನಿರ್ಣಯ ಕೈಗೊಳ್ಳಲಾಯಿತು ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆ ಪಡೆದ ಬಳಿಕ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ ಮಾಡಲಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದರು.

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು. ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ.
ಬಳ್ಳಾರಿ 11 ಕಂದಾಯ ತಾಲೂಕು, 3 ಕಂದಾಯ ಉಪ ವಿಭಾಗಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿತ್ತು. ಈಗ ಬಳ್ಳಾರಿ ಜಿಲ್ಲೆಯಲ್ಲಿ ಕುರುಗೋಡು, ಸಿರಗುಪ್ಪ, ಸಂಡೂರು ಹಾಗೂ ಕೂಡ್ಲಿಗಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ. ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಕೊಟ್ಟೂರು, ಹಡಗಲಿ ತಾಲೂಕುಗಳಿರಲಿವೆ.
ಆಡಳಿತ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಸರ್ಕಾರ ಮುಂದಾಗಿದ್ದು, ಗಾಲಿ ರೆಡ್ಡಿ ಸೋದರರು ವಿರೋಧ ವ್ಯಕ್ತಪಡಿಸಿದ್ದರೆ, ಆನಂದ್ ಸಿಂಗ್ ಬಣ ಸಹಮತ ವ್ಯಕ್ತಪಡಿಸಿದ್ದರು. ಸಾರ್ವಜನಿಕರಲ್ಲೂ ಪರ-ವಿರೋಧ ಚರ್ಚೆ ಮುಂದುವರೆದಿತ್ತು.
ಆನಂದ್ ಸಿಂಗ್ ಪ್ರತಿಕ್ರಿಯೆ: ವಿಧಾನಸೌಧದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿ, ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆ ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ತೀರ್ಮಾನದಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ, ಎಲ್ಲರನ್ನೂ ವಿಶ್ವಾಸಕ್ಜೆ ತೆಗೆದುಕೊಂಡಿದ್ದೇವೆ, ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.












Click it and Unblock the Notifications