"ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ; ನನ್ನ ಮಾತಿಗೆ ಬದ್ಧ''
ಹೊಸಪೇಟೆ, ಜನವರಿ 11: ಒಂದು ವರ್ಷದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿರುವುದು ಸಿಎಂ ಹಾಗೂ ಬಿಜೆಪಿ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ.
ಆಡಳಿತ ಬಿಜೆಪಿ ಪಕ್ಷದ ಹಲವು ಹಿರಿಯ ಶಾಸಕರು ನಮಗೂ ಅವಕಾಶ ಸಿಗಬಹುದು ಎಂದು ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಇದೇ ಜ.13 ಅಥವಾ 14 ರಂದು 7 ಜನ ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಅರಣ್ಯ ಸಚಿವ ಆನಂದ್ ಸಿಂಗ್, ""ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇರುವುದಾದರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ'' ಎಂದು ಹೇಳಿದ್ದಾರೆ.

ಹೊಸಪೇಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸದಾ ಸಿದ್ಧವಾಗಿರುವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ಸರ್ಕಾರ ರಚನೆ ಮಾಡಲು ಕಾರಣೀಕರ್ತರಾದ ನಮಗೆಲ್ಲ ಸಚಿವ ಸ್ಥಾನ ನೀಡಿದ್ದಾರೆ ಎಂದರು.
ಇನ್ನುಳಿದವರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ನಮ್ಮ ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿಯೂ ಕೊಟ್ಟ ಮಾತು ಈಡೇರಿಸಿದ್ದಾರೆ. ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇದ್ದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧ ಎಂದಿದ್ದೆ, ನಾನು ಈಗಲೂ ಆ ಮಾತಿಗೆ ಬದ್ಧನಾಗಿದ್ದೇನೆ ಎಂದು ಆನಂದ್ ಸಿಂಗ್ ತಿಳಿಸಿದರು.
ನನಗೆ ಬಳ್ಳಾರಿ ಜಿಲ್ಲಾ ವಿಭಜನೆ ಹಾಗೂ ವಿಜಯನಗರ ಜಿಲ್ಲೆ ರಚನೆ ಮಾಡುವುದು ಮುಖ್ಯ. ನನ್ನ ಬೇಡಿಕೆಯನ್ನು ಸಿಎಂ ಈಡೇರಿಸಿದ್ದಾರೆ. ಹೀಗಾಗಿ ಅವರು ಕೇಳಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಆನಂದ್ ಸಿಂಗ್ ಮತ್ತೊಮ್ಮೆ ಹೇಳಿದರು.












Click it and Unblock the Notifications