ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ವಿಜಯನಗರ, ಜುಲೈ 24: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆ ಜನಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ತುಂಗಭದ್ರಾ ಆಡಳಿತ ಮಂಡಳಿ ಸೂಚನೆ ನೀಡಿದೆ.
ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಳೆದ ಒಂದು ವಾರದಿಂದ ಚಿಕ್ಕಮಗಳೂರು, ಶಿವಮೊಗ್ಗ, ಹೊನ್ನಾಳಿ, ಭದ್ರಾವತಿ, ದಾವಣಗೆರೆ ಹೀಗೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದೆ.
ತುಂಗಭದ್ರಾ ಜಲಾಶಯದಿಂದ ಯಾವ ಸಮಯದಲ್ಲಿ ಬೇಕಾದರೂ ನದಿ ನೀರು ಬಿಡಲಾಗುತ್ತದೆ ಎಂದು ತುಂಗಭದ್ರಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಇಂಜಿನಿಯರ್ ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ.
ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಅವರು, "ಸದ್ಯ ಜಲಾಶಯದಲ್ಲಿ 1625.14 ಅಡಿ ಇದ್ದು, 73.357 ಟಿಎಂಸಿ ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಇನ್ನು 8 ಅಡಿ ಮಾತ್ರ ಬಾಕಿ ಇದೆ. ಸದ್ಯ ಜಲಾಶಯಕ್ಕೆ 1,20,411 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಸೆಂಟ್ರಲ್ ವಾಟರ್ ಕಮಿಷನ್ ಹವಾಮಾನದ ಬಗ್ಗೆ ತಿಳಿಸಿದ್ದು, ಶಿವಮೊಗ್ಗದಿಂದ ನದಿಗೆ 2,11,890 ಕ್ಯೂಸೆಕ್ ನೀರು ಹರಿದು ಬರುವ ಸಾಧ್ಯತೆ ಇದೆ,'' ಎಂದು ಮಾಹಿತಿ ನೀಡಿದೆ.
"ಹಾಗಾಗಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ. ಹಾಗಾಗಿ ಜುಲೈ 25ರಂದು ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಹರಿಸು ಸಾಧ್ಯತೆ ಇರುತ್ತದೆ. ಹಾಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆಯ ಸಲುವಾಗಿ ಸುರಕ್ಷಿತರ ಸ್ಥಳಕ್ಕೆ ತೆರಳಬೇಕು,'' ಎಂದು ತಿಳಿಸಿದ್ದಾರೆ.
Recommended Video