ತುಂಗಭದ್ರಾ ಡ್ಯಾಂಗೆ ಒಳಹರಿವು ಏರಿಕೆ: ರೈತರಿಗೆ ಸಂತಸದ ಸುದ್ದಿ ಇಲ್ಲಿದೆ
ಬಳ್ಳಾರಿ, ಜುಲೈ 18: ನೈಋತ್ಯ ಮುಂಗಾರು ಮಳೆ ಮಲೆನಾಡಿನಲ್ಲಿ ಅಬ್ಬರಿಸುತ್ತಿದೆ. ಮಳೆಯ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿದೆ. ಆದ್ದರಿಂದ ತುಂಗಭದ್ರಾ ಡ್ಯಾಂ ವ್ಯಾಪ್ತಿಯ ರೈತರಿಗೆ ಸಿಹಿಸುದ್ದಿ ನೀಡಲಾಗಿದೆ.
ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿಎಂಸಿ ಅಡಿ ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ ಇದೆ. ಆದ್ದರಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಸೂಚನೆ ನೀಡಿದ್ದಾರೆ.

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಲ್. ಬಸವರಾಜ್ ತಿಳಿಸಿದ್ದಾರೆ.
ನೀರು ಹರಿಸುವ ವೇಳಾಪಟ್ಟಿ
* ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜು.19 ರಿಂದ ಸರಾಸರಿ 4100 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಜು.19 ರಿಂದ ಆ.03 ರಿಂದ ಸರಾಸರಿ 25 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು. ತುಂಗಭದ್ರಾ ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಜು.19 ರಿಂದ ಸರಾಸರಿ 650 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.
ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.22 ರಿಂದ ಸರಾಸರಿ 1300 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು. ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜು.01 ರಿಂದ 180 ಕ್ಯೂಸೆಕ್ನಂತೆ ನೀರು ಹರಿಬಿಡಲಾಗುತ್ತಿದೆ. ನದಿ ಪೂರಕವಾಗಿ ಸುಮಾರು 1000 ಕ್ಯೂಸೆಕ್ ಮತ್ತು ಕಾರ್ಖಾನೆಗಳಿಗೆ 60 ಕ್ಯೂಸೆಕ್ನಂತೆ ನೀರು ಹರಿಸಲಾಗುವುದು.
ರೈತ ಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.
ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕೃತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ತುಂಗಭದ್ರಾ ಜಲಾಶಯದ ಪೂರ್ಣಮಟ್ಟ 1633 ಅಡಿ, 1614.31 ಅಡಿಗಳು. ಒಟ್ಟು ನೀರು ಸಂಗ್ರಹ ಡ್ಯಾಂ ಸಾಮರ್ಥ್ಯ 105.79 ಅಡಿಗಳು. ಇಂದಿನ ನೀರಿನ ಮಟ್ಟ 46.80 ಅಡಿಗಳು.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದ್ದು 71 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಆದ್ದರಿಂದ ತುಂಗಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಿದೆ.











Click it and Unblock the Notifications