ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 08 : ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಡೆಸುವ ಸವಾರರಿಗೆ ಸಿಹಿ ಸುದ್ದಿ. ಸದಾ ವಾಹನ ಸಂಚಾರ ದಟ್ಟಣೆಯಿಂದ ಕೂಡಿರುವ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಒಂದು ವರ್ಷದೊಳಗೆ ಅಗಲೀಕರಣ ಕಾರ್ಯ ಪೂರ್ಣಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಬಳ್ಳಾರಿ ರಸ್ತೆಯಲ್ಲಿ ಬಿಡಿಎ ಜಂಕ್ಷನ್ನಿಂದ-ಮೇಖ್ರಿ ವೃತ್ತದ ತನಕ ಸದಾ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ರಸ್ತೆ ವಿಸ್ತರಣೆಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ, ಬಿಬಿಎಂಪಿಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡುವಂತೆ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.[ಟೆಂಡರ್ ಶ್ಯೂರ್ ಯೋಜನೆಯಡಿ ಎಂ.ಜಿ.ರಸ್ತೆ ಅಭಿವೃದ್ಧಿ]
ವಿಜಯ್ ಮೆನನ್ ಮುಂತಾದವರು ಬೆಂಗಳೂರು ನಗರದ ರಸ್ತೆಗಳ ದುಸ್ಥಿತಿ ಬಗ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಬುಧವಾರ ನಡೆಯಿತು. ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ್ ಅವರಿದ್ದ ಪೀಠ ರಸ್ತೆ ವಿಸ್ತರಣೆಗೆ ಆದೇಶ ನೀಡಿತು.[ಚಿತ್ರಗಳು : ಓಕಳಿಪುರಂ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ]
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದು ತಿಂಗಳಿನಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಆರಂಭಿಸಬೇಕು. ಒಂದು ವರ್ಷದೊಳಗೆ ಅಗಲೀಕರಣ ಕಾರ್ಯ ಪೂರ್ಣಗೊಳ್ಳಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.[ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಹೊಸ ರಸ್ತೆ]
ಅರಮನೆ ಮೈದಾನದ ವಿವಾದ : ಮೈಸೂರು ರಾಜಮನೆತನ ಮತ್ತು ಕರ್ನಾಟಕ ಸರ್ಕಾರದ ನಡುವೆ ಅರಮನೆ ಮೈದಾನದ 454 ಎಕರೆ ಭೂಮಿಯ ವಿವಾದದ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. 2014ರಲ್ಲಿ ಸರ್ಕಾರ ಸಾರ್ವಜನಿಕ ಹಿತದೃಷ್ಠಿಯಿಂದ ರಸ್ತೆ ಅಗಲೀಕರಣ ಅನಿವಾರ್ಯ ಎಂದು ಕೋರ್ಟ್ಗೆ ಹೇಳಿತ್ತು.
Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ
ಆಗ ಸುಪ್ರೀಂಕೋರ್ಟ್ ವಿವಾದದ ವಿಚಾರಣೆ ಬಾಕಿ ಇದ್ದರೂ ರಸ್ತೆಯನ್ನು ವಿಸ್ತರಣೆ ಮಾಡಬಹುದು ಎಂದು ಆದೇಶ ನೀಡಿತ್ತು. ಆದ್ದರಿಂದ, ರಸ್ತೆ ವಿಸ್ತರಣೆಗೆ ಇದ್ದ ಕಾನೂನು ಅಡ್ಡಿಗಳು ದೂರವಾಗಿವೆ.