ಸಿಎಂ ಬೆಂಗಳೂರು ರೌಂಡ್ಸ್ : ಪೀಣ್ಯ ಅಭಿವೃದ್ಧಿಗೆ 100 ಕೋಟಿ
ಬೆಂಗಳೂರು, ಜೂ. 06 : ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗೆ 100 ಕೋಟಿ ರೂ.ಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಿಗಳಿಗೆ ಭರವಸೆ ನೀಡಿದ್ದಾರೆ. ಪೀಣ್ಯದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ನೆಡೆಸಿದ ಮುಖ್ಯಮಂತ್ರಿಗಳು ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ತೆರಳಿ ಉದ್ಯಮಿಗಳ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು 100 ಕೋಟಿ ನೆರವು ನೀಡುವುದಾಗಿ ಹೇಳಿದರು. [ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ ಮುಖ್ಯಾಂಶಗಳು]
ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪರಿಶೀಲನೆ ನಡೆಸಲು ಪ್ರತಿ ಶನಿವಾರ ಬೆಂಗಳೂರು ಪ್ರದಕ್ಷಿಣೆ ನಡೆಸುತ್ತೇನೆ ಎಂದು ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಮೂರನೇ ಭಾರಿಗೆ ನಗರ ಪ್ರದಕ್ಷಿಣೆ ಮಾಡಿದರು. ಈ ಸಂದರ್ಭದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದ ರಸ್ತೆಗಳು ಪದೇ ಪದೇ ಹಾಳಾಗುತ್ತಿರುವ ಬಗ್ಗೆ ಉದ್ಯಮಿಗಳು ದೂರು ನೀಡಿದರು. [ಮೇ 15ರ ಬೆಂಗಳೂರು ಪ್ರದಕ್ಷಿಣೆಯಲ್ಲಿ ಏನಾಯ್ತು?]
ಅಭಿವೃದ್ಧಿಗೆ ಒತ್ತು : ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ ಎಂದು ಭರವಸೆ ನೀಡಿದ ಸಿದ್ದರಾಮಯ್ಯ ಅವರು, ಪದೇ ಪದೇ ರಸ್ತೆಗಳು ಹಾಳಾಗದಂತೆ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುತ್ತೇವೆ ಎಂದು ಕೈಗಾರಿಕೋದ್ಯಮಿಗಳಿಗೆ ಭರವಸೆ ಕೊಟ್ಟರು.